ಚಿಕ್ಕಮಗಳೂರು: ನಗರದ ವಿವಿಧ ಭಾಗಗಳಿಗೆ ಭೇಟಿನೀಡಿದ ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ ಪರಿಶೀಲನೆ ನಡೆಸಿದರು.
ಇಂದು ಇಲ್ಲಿನ ಎರಡು ಮಹಿಳಾ ಹಾಸ್ಟೆಲ್ಗಳಿಗೆ ಭೇಟಿನೀಡಿ ಅಲ್ಲಿನ ನ್ಯೂನತೆಗಳ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿನಿಯರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸುವ ಜೊತೆಗೆ ಸ್ವಚ್ಛತೆ ಕಾಪಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿನಿಯರಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಅವರು, ತಕ್ಷಣ ಹಾಸ್ಟೆಲ್ಗಳಲ್ಲಿ ಯಾವುದೇ ಸಮಸ್ಯೆ ತಲೆದೋರದಂತೆ ಕ್ರಮವಹಿಸಬೇಕೆಂದು ಹೇಳಿದರು.
ನಗರಸಭೆ ಕಸದ ಡಂಪಿಂಗ್ ಯಾರ್ಡ್ಗೆ ಭೇಟಿನೀಡಿದ್ದು, ಇದರಲ್ಲಿ ಉತ್ಪತ್ತಿಯಾಗುತ್ತಿರುವ ಕೊಳಚೆ ನೀರು ಗ್ರಾಮದ ಕಾಲುವೆಯಲ್ಲಿ ಹರಿಯುತ್ತಿರುವುದರಿಂದ ಕೆಟ್ಟ ವಾಸನೆ ಬರುತ್ತಿದೆ. ಜೊತೆಗೆ ಸೊಳ್ಳೆ, ನೊಣಗಳ ಕಾಟವೂ ಹೆಚ್ಚಾಗಿ ರೋಗರುಜಿನಗಳಿಗೆ ಆಹ್ವಾನ ನೀಡಿದಂತಾಗಿದೆ ಎಂದು ಇಲ್ಲಿನ ಸಾರ್ವಜನಿಕರು ದೂರು ನೀಡಿದ್ದಾರೆಂದು ತಿಳಿಸಿದರು.
ಡಂಪಿಂಗ್ ಯಾರ್ಡ್ನಲ್ಲಿ ಬಹಳ ದೊಡ್ಡ ಸಮಸ್ಯೆ ಇದೆ, ಡ್ರೈವೇಸ್ಟ್ ಆಗಿ ಹೊರಬರುವ ಕಸವನ್ನು ಸ್ಥಳಾಂತರ ಮಾಡದೆ ಸುಮಾರು ೨೫ ವರ್ಷಗಳಿಂದ ವಿಲೇ ಮಾಡಲಾಗಿಲ್ಲ, ಇಡೀ ಗುಡ್ಡ ಕಸವಾಗಿದೆ. ಇದರಿಂದ ಬರುವ ನೀರು ಕಲುಶಿತಗೊಂಡು ಕೃಷಿಗೆ, ತೋಟಗಾರಿಕೆಗೆ ಹಾಗೂ ದನಕರುಗಳಿಗೆ, ನಾಗರೀಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಸಿದರು.
ಈ ಬಗ್ಗೆ ತಾಂತ್ರಿಕ ಅಧ್ಯಯನ ಆಗಬೇಕು, ನಂತರ ವೈಜ್ಞಾನಿಕ ಪರಿಹಾರ ಕ್ರಮಗಳ ಬಗ್ಗೆ ಸೂಕ್ತ ಕಾನೂನು ಸಲಹೆಗಳನ್ನು ಪಡೆಯಬೇಕಾಗಿರುವುದರಿಂದ ನಗರಸಭೆ ಪೌರಾಯುಕ್ತರು ಮತ್ತು ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಸಮಸ್ಯೆಯನ್ನು ಇತ್ಯರ್ಥಪಡಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಪ್ರತಿ ತಿಂಗಳು ನಡೆಯುವ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಒಣ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ಆದರೆ, ಈ ಕಾರ್ಯ ಅಂತಿಮಗೊಳ್ಳಲು ಸುಮಾರು ವರ್ಷಾನುಗಟ್ಟೆಲೆಯಾಗುತ್ತದೆ. ಈ ಸಂಬಂಧ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಇಂಜಿನಿಯರ್ನ್ನು ಆಹ್ವಾನಿಸಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಏನು ತೀರ್ಮಾನ ಮಾಡಬಹುದು ಎಂಬುದರ ಬಗ್ಗೆ ಪ್ರಸ್ತಾವನೆ ಕಳಿಸುವುದಾಗಿ ತಿಳಿಸಿದರು.
ಒಣ ಕಸ ಸ್ಥಳಾಂತರ ಮಾಡಲು ತುಂಬಾ ಕಷ್ಟ ಇದ್ದು, ಬೇರೆಡೆಗೆ ಹಾಕಿದರೆ ಅಲ್ಲಿ ತೊಂದರೆಯಾಗುತ್ತದೆ ಎಂಬುದನ್ನು ಮನಗಂಡು ಪರಿಶೀಲನೆ ಮಾಡಿ ಇರುವ ಜಾಗದಲ್ಲಿಯೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ನಿರ್ದೇಶನ ನೀಡಿ ಸಲಹೆ ನೀಡಲಾಗಿದೆ ಎಂದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡುಕಡೆ ತುಂಬ ಚೆನ್ನಾಗಿ ಕಸ ವಿಲೇವಾರಿಗೆ ಕ್ರಮವಹಿಸಲಾಗಿದೆ. ಅದೇ ಮಾದರಿಯಲ್ಲಿ ಚಿಕ್ಕಮಗಳೂರಿನಲ್ಲಿಯೂ ನಿರ್ಮಾಣ ಮಾಡಿ ಕೊಳಚೆ ನೀರನ್ನು ಶುದ್ಧೀಕರಿಸಿ ಕುಡಿಯುವ ನೀರನ್ನು ಹೊರತುಪಡಿಸಿ, ತೋಟಗಾರಿಕೆಗೆ, ಕೃಷಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ನಗರದ ಗ್ರಾಮೀಣ ಸಾರಿಗೆ ಬಸ್ ನಿಲ್ದಾಣಕ್ಕೆ ಭೇಟಿನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶೌಚಾಲಯ ಸರಿ ಇಲ್ಲ, ತುಂಬಾ ಗಲೀಜಾಗಿದೆ. ಕ್ಯಾಂಟೀನ್ ಅಡುಗೆ ಮನೆಯಲ್ಲಿ ಸ್ವಚ್ಛತೆ ಇಲ್ಲ. ಈ ಬಗ್ಗೆ ಪ್ರತಿದಿನ ಆರೋಗ್ಯ ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಬೇಕೆಂದು ನಿರ್ದೇಶನ ನೀಡಿದ್ದೇನೆ, ಈ ಕುರಿತು ಒಂದು ಕೇಸು ದಾಖಲಿಸಿರುವುದಾಗಿ ತಿಳಿಸಿದರು.
ಸುಮಾರು ೧೯ ಕೋಟಿ ರೂ ವೆಚ್ಚದಲ್ಲಿ ಗ್ರಾಮೀಣ ರಸ್ತೆ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದ್ದು, ಅಲ್ಲಿಯವರೆಗೆ ಒಂದು ಬೋರ್ವೆಲ್ ತೆಗೆಸಿ ನೀರಿನ ಸಮಸ್ಯೆ ಪರಿಹರಿಸಬೇಕು, ಬಸ್ ನಿಲ್ದಾಣದಲ್ಲಿ ನೀರು ನಿಲ್ಲದಂತೆ ಜಲ್ಲಿಯನ್ನು ಹಾಕಿ ಎತ್ತರ ಮಾಡಿ ನೀರು ಒಂದೆಡೆ ಕಾಲುವೆಗೆ ಹರಿಯುವಂತೆ ಕ್ರಮವಹಿಸಲು ಸೂಚನೆ ನೀಡಿದರು.
ಈಗ ಪ್ರಕರಣ ದಾಖಲಾಗಿರುವ ಅಧಿಕಾರಿಗಳಿಗೆ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಇತ್ಯರ್ಥಪಡಿಸಿದ ವರದಿ ನೀಡಿದರೆ ಪ್ರಕರಣ ವಾಪಾಸ್ ಪಡೆಯುವುದಾಗಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಎಂ ಪಾಟೀಲ್, ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೀಕರ್, ಶಿವಾಜಿ ಅನಂತ್ ನಲ್ಪಾಡೆ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ, ಜಿಲ್ಲಾಧಿಕಾರಿ ಸಿ.ಎನ್ ಮೀನಾನಾಗರಾಜ್, ಜಿ.ಪಂ ಸಿಇಓ ಹೆಚ್.ಎಸ್. ಕೀರ್ತನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
