ಚಿಕ್ಕಮಗಳೂರು: ರಾಮ ಹೇಗೆ ಗುಣಗಳ ಗಣಿಯೋ ಹಾಗೇ ಆ ರಾಮನ ವ್ಯಕ್ತಿತ್ವವನ್ನು ಮರೆಯದಂತೆ ನಮ್ಮ ಹೃದಯದಲ್ಲಿ ಅಚ್ಚಾಗುವಂತೆ ಮಾಡಿರುವ ಮಹರ್ಷಿ ವಾಲ್ಮೀಕಿಯವರು ಅಗಣಿತ ಗುಣಗಳ ಗಣಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ಕಲಾಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಹೆಚ್.ಡಿ.ತಮ್ಮಯ್ಯ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಒಬ್ಬ ಮಹಾನ್ ವ್ಯಕ್ತಿ ಮಹರ್ಷಿ ವಾಲ್ಮೀಕಿಯವರು. ಅವರನ್ನು ಅತ್ಯಂತ ಗೌರವದಿಂದ ಆದಿಕವಿ ಎನ್ನಲಾಗುತ್ತದೆ. ದೇಶದಲ್ಲಿ ರಾಮಾಯಣ, ಮಹಾಭಾರತ ಎಲ್ಲರ ಬದುಕಿಗೆ ಆದರ್ಶದ ಮಹಾ ಕಾವ್ಯಗಳಾಗಿವೆ. ರಾಮಾಯಣ ರಚಿಸಿದ್ದು ವಾಲ್ಮೀಕಿಯಾದರೆ, ಮಹಾಭಾರತ ರಚಿಸಿದ್ದು ವೇದ ವ್ಯಾಸರು. ಈ ಮಹಾನ್ ಗ್ರಂಥಗಳನ್ನು ರಚಿಸಿದ ಇವರಿಬ್ಬರೂ ಶೋಷಿತ ವರ್ಗದಿಂದ ಬಂದವರು ಎಂಬುದು ಹೆಮ್ಮೆಯ ವಿಷಯ ಎಂದರು.
ಜಿಲ್ಲಾ ವಾಲ್ಮೀಕಿ ಸಂಘದ ಅಧ್ಯಕ್ಷ ಬಿ.ಕೆ.ಭೀಮಪ್ಪ, ಜಿಲ್ಲಾ ವಾಲ್ಮೀಕಿ ಯುವಕ ಸಂಘದ ಜಗದೀಶ್ ಕೋಟೆ, ಜಿ.ಪಂ. ಉಪಕಾರ್ಯದರ್ಶಿ ಶಂಕರ್ ಕೊರವರ, ತಾಲ್ಲೂಕು ತಹಸೀಲ್ದಾರ್ ರೇಷ್ಮಾಶೆಟ್ಟಿ, ಮುಖಂಡರಾದ ಕೆ.ಟಿ.ರಾಧಾಕೃಷ್ಣ, ವಾಲ್ಮೀಕಿ ಸಂಘದ ಉಪಕಾರ್ಯದರ್ಶಿ ಮಧುಕುಮಾರ್, ಐ ಟಿ ಡಿ ಪಿ ಜಿಲ್ಲಾ ಅಧಿಕಾರಿ ರಮೇಶ್ ಸ್ವಾಗತಿಸಿದರು. ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಮುನ್ನ ನಗರದ ತಾಲ್ಲೂಕು ಕಚೇರಿಯಿಂದ ಕಲಾಮಂದಿರದವರೆಗೆ ಮೆರವಣಿಗೆ ಗಮನ ಸೆಳೆಯಿತು.
