ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಐತಿಹಾಸಿಕ ‘ಲಕ್ಷ ಕಂಠ ಗೀತ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಈ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಯಿತು.
ಈ ಭೇಟಿಯು ಉಡುಪಿಯ ಸಂಸ್ಕೃತಿ, ಆತಿಥ್ಯ ಮತ್ತು ಸಂಪ್ರದಾಯವನ್ನು ಜಗತ್ತಿಗೆ ತೋರಿಸುವ ಅವಕಾಶವಾಗಿದ್ದು, ಪ್ರಧಾನಿಯವರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಈ ತಿಂಗಳು ಪೂರ್ತಿ ನಡೆಯುವ ಗೀತೋತ್ಸವದಲ್ಲಿ ಸಂತ ಸಂಗಮ, ಗೀತ ಯಾಗ, ಮತ್ತು ಅಂತರಾಷ್ಟ್ರೀಯ ಗೀತಾ ಸಮ್ಮೇಳನದಂತಹ ಹಲವು ಕಾರ್ಯಕ್ರಮಗಳು ಇರಲಿವೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಮೆರಿಕಾ ಹಾಗೂ ಇತರ ದೇಶಗಳ ಗಣ್ಯರು, ಮತ್ತು ಹಲವು ಕೇಂದ್ರ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪ್ರಧಾನಿ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಯಶ್ಪಾಲ್ ಸುವರ್ಣ ,ಉಡುಪಿಗೆ ಪ್ರಧಾನಿ ಆಗಮಿಸುತ್ತಿರುವುದು ಹೆಮ್ಮೆಯ ಸಂಗತಿ.ಸೋಮವಾರ ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿದ್ದೇವೆ.

ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ.ಅಗತ್ಯ ಭದ್ರತೆ ಮತ್ತು ಸಿದ್ಧತೆ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ.ನವೆಂಬರ್ 28 ರಂದು ಮಧ್ಯಾಹ್ನ 12 ಗಂಟೆಗೆ ಮೋದಿ ಕೃಷ್ಣದರ್ಶನ ಮಾಡಿದ ಬಳಿಕ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ಕಾರ್ಯಕ್ರಮ ಕುರಿತು ಮಾತನಾಡಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಮೊದಲು ಮಂಗಳೂರು ಮತ್ತು ಮಂಡ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಲೂ ಪ್ರಧಾನಿ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಅನುಭವದೊಂದಿಗೆ ಅಗತ್ಯ ಭದ್ರತೆ ಕೈಗೊಳ್ಳಲಾಗುತ್ತದೆ.ಜೊತೆಗೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಮಠಾಧೀಶರು ಈ ಸಂಬಂಧ ಎಲ್ಲ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.
