ಸಕಲೇಶಪುರ: ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ ನೂತನ ಪಶು ಆಸ್ಪತ್ರೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದರು.

ತಾಲೂಕಿನಲ್ಲಿ ಸುಮಾರು 31 ಸಾವಿರಕ್ಕೂ ಹೆಚ್ಚು ಜಾನುವಾರುಗಳಿದ್ದು, 16 ಪ್ರಾಥಮಿಕ ಪಶು ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಅಗತ್ಯಕ್ಕೆ ತಕ್ಕಂತೆ ಪಶು ವೈದ್ಯರು, ಸಹಾಯಕರು ಹಾಗೂ ಡಿ ದರ್ಜೆ ನೌಕರರ ಕೊರತೆ ತೀವ್ರವಾಗಿದೆ. “ಈ ಹಿಂದೆ ಹಲವು ಬಾರಿ ಪಶುಸಂಗೋಪನಾ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ. ಆದರೂ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ನಿರಾಸಕ್ತಿ ತೋರಿಸುತ್ತಿರುವುದು ಬೇಸರದ ವಿಚಾರ ಎಂದು ವಿಷಾದ ವ್ಯಕ್ತಪಡಿಸಿದರು.
ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ನಿಯಮಿತವಾಗಿ ಹಾಕಿಸುವುದರಿಂದ ರೋಗಗಳನ್ನು ತಡೆಗಟ್ಟಬಹುದು ಮತ್ತು ಹರಡದಂತೆ ತಡೆಯಬಹುದು. ಜಾನುವಾರುಗಳ ಆರೋಗ್ಯ ಕಾಪಾಡುವುದು ರೈತರ ಆರ್ಥಿಕ ಸ್ಥಿರತೆಗೆ ಸಹಾಯಕ” ಎಂದರು.

ಈ ಸಂಧರ್ಭದಲ್ಲಿ ತಾಲೂಕು ಪಶು ವೈದ್ಯಾಧಿಕಾರಿ ವೆಂಕಟೇಶ್,ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಸೇರಿದಂತೆ ಗ್ರಾ. ಪಂ ಸದಸ್ಯರು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
