ಚಿಕ್ಕಮಗಳೂರು: ತಾಲ್ಲೂಕಿನ ಮುಗುಳವಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಇಂದು ಬೆಳಗ್ಗೆ ‘ಉಳಿಸಿ ಉಳಿಸಿ ನಮ್ಮ ಶಾಲೆ ಉಳಿಸಿ’ ಎಂಬ ಘೋಷಣೆಯೊಂದಿಗೆ ಆರಂಭವಾದ ಗ್ರಾಮಸ್ಥರ ಪ್ರತಿಭಟನೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಹೆಸರಿನಲ್ಲಿ ವರ್ಗಾವಣೆ ಮಾಡದೆ ಶಾಲೆಯ ದೈಹಿಕ ಶಿಕ್ಷಕ ಶೇಖರ್ ನಾಯ್ಕ ಅವರನ್ನು ಇಲ್ಲೇ ಮುಂದುವರೆಸುವಂತೆ ಒತ್ತಾಯಿಸಿದರು.
ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಗುಳುವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ರಘುನಂದನ್ ೧೯೨೯ ರಲ್ಲಿ ಪ್ರಾರಂಭವಾಗಿದ್ದ ಈ ಶಾಲೆ ಶೀಘ್ರದಲ್ಲೇ ಶತಮಾನೋತ್ಸವ ಆಚರಿಸಿಕೊಳ್ಳುವ ವಸ್ತಿಲಿನಲ್ಲಿರುವ ಇಂತಹ ಉನ್ನತ ಶಾಲೆಯ ಶಿಕ್ಷಕರನ್ನು ಶಿಕ್ಷಣ ನೀತಿ ಹೆಸರಿನಲ್ಲಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿದರು.
