ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಉಡುಪಿಗೆ ಭೇಟಿ ನೀಡುತ್ತಿದ್ದು, ಪ್ರಧಾನಿಗಳ ಸ್ವಾಗತಕ್ಕೆ ನಗರ ಸಜ್ಜಾಗಿದೆ. ಉಡುಪಿ ನಗರ ಸಂಪೂರ್ಣ ಕೇಸರಿಮಯವಾಗಿದ್ದು, ಪ್ರಧಾನಿ ಮೋದಿಯವರನ್ನ ಸ್ವಾಗತಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ನಗರದ ಸುತ್ತಮುತ್ತ ಬಂಟಿಂಗ್ಸ್ ಮತ್ತು ಕೇಸರಿ ಪತಾಕೆಗಳು ರಾರಾಜಿಸುತ್ತಿವೆ.
ಭಕ್ತರಿಗೆ ದರ್ಶನ ನಿರ್ಬಂಧ
ಪ್ರಧಾನಿ ಮೋದಿ ಅವರಿಂದು ಉಡುಪಿ ನಗರಕ್ಕೆ ಆಗಮಿಸಲಿದ್ದು, ಭೇಟಿ ವೇಳೆ ಕೃಷ್ಣನ ಸನ್ನಿಧಾನಕ್ಕೆ ಆಗಮಿಸಲಿದ್ದಾರೆ. ಇದಕ್ಕಾಗಿ ಇಂದು ಬೆಳಗ್ಗೆ 8 ಗಂಟೆಯಿಂದ 3 ಗಂಟೆಯವರೆಗೂ ಭಕ್ತರಿಗೆ ದೇವರ ದರ್ಶನ ನಿರ್ಬಂಧಿಸಲಾಗಿದೆ. ರಥಬೀದಿ, ಅಷ್ಟಮಠ-ಕೃಷ್ಣ ಮಠಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಸಂಜೆಯ ಬಳಿಕ ದೇವರ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ರಥಬೀದಿ ಮೂಲಕ ಆಗಮಿಸುವ ಪ್ರಧಾನಿ ಮೋದಿ ಮೊದಲು ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದೇವರ ದರ್ಶನ ಮಾಡುತ್ತಾರೆ. ಸುವರ್ಣ ಕನಕನ ಕಿಂಡಿ ಉದ್ಘಾಟಿಸಿ ಕನಕದಾಸರ ಗುಡಿ ದರ್ಶನ ಮಾಡುತ್ತಾರೆ. ಮಠದೊಳಗೆ ಬಂದು ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆಗೈದು ಶ್ರೀಕೃಷ್ಣನ ದರ್ಶನ ಮಾಡುತ್ತಾರೆ. ಚಿನ್ನದ ತೀರ್ಥ ಮಂಟಪ ಉದ್ಘಾಟಿಸಿ, ಅಷ್ಟಮಠಾಧೀಶರನ್ನ ಭೇಟಿ ಮಾಡಿ ಪ್ರಸಾದ ಸ್ವೀಕರಿಸಿ ಗೀತಾ ಮಂದಿರಕ್ಕೆ ಭೇಟಿ ಕೊಡಲಿದ್ದಾರೆ.
ಪ್ರಧಾನಿ ಮೋದಿ ಭೇಟಿ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಕೃಷ್ಣ ಮಠ ವೇಳೆ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023, ಸೆಕ್ಷನ್ 163ರ ಅನ್ವಯದ ಪ್ರಕಾರ ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ ವಠಾರ, ಪ್ರವಾಸಿ ಮಂದಿರದ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಡಿಸಿ ಆದೇಶಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಹೆಲಿಪ್ಯಾಡ್ ನಿಂದ ಕೃಷ್ಣಮಠದವರೆಗೆ ಮೋದಿ ಸಾಗುವ ರಸ್ತೆಯಲ್ಲಿ ಬಾಂಬ್ ಸ್ಕ್ವಾಡ್ ಬೀಡುಬಿಟ್ಟಿದೆ. ಶ್ವಾನ ದಳ ಇಂಚಿಂಚೂ ತಪಾಸಣೆ ಮಾಡುತ್ತಿದೆ. ಆದಿ ಉಡುಪಿ ಕರಾವಳಿ, ಬನ್ನಂಜೆ ಸಿಟಿ ಬಸ್ ನಿಲ್ದಾಣ ಕೃಷ್ಣಮಠದ ಪಾರ್ಕಿಂಗ್ ಏರಿಯಾದ ಮೇಲೆ ವಿಶೇಷ ಕಣ್ಗಾವಲು ಇರಿಸಲಾಗಿದೆ.
