ಚಿಕ್ಕಮಗಳೂರು: ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದರಿರುವುದನ್ನು ಖಂಡಿಸಿ ಡಿ.5ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಪೌರ ನೌಕರರ ಸಂಘದ ಜಿಲ್ಲಾ ಶಾಖೆ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಇಂದು ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ರವರಿಗೆ ಮನವಿ ಸಲ್ಲಿಸಿದ ಬಳಿಕ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ ಸಂಘದ ಜಿಲ್ಲಾಧ್ಯಕ್ಷ ಎನ್.ಅಣ್ಣಯ್ಯ, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಇವರುಗಳು ಕಳೆದ ಮೇ.27 ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರಕ್ಕೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಶೀಘ್ರವೇ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಡಲಾಗಿತ್ತು ಎಂದರು.
ಇಂದು ಒಂದು ದಿನ ಸಾಂಕೇತಿಕವಾಗಿ ರಾಜ್ಯಾದ್ಯಂತ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಲೇಖನಿ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಡಿ.5 ರಿಂದ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ಲೆಕ್ಸ್ ಬ್ಯಾನರ್ಗಳನ್ನು ಅಳವಡಿಸಿ ಮುಷ್ಕರ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಈ ಸಂಬಂಧ ಶಾಸಕರು, ಸಂಸದರು, ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಪೊಲೀಸ್ ಉಪ ನಿರೀಕ್ಷಕರು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರಿಗೆ ಪೌರಾಯುಕ್ತರು, ಮುಖ್ಯಾಧಿಕಾರಿಗಳ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸುತ್ತೇವೆ ಎಂದರು.
ರಾಜ್ಯಸರ್ಕಾರ ಪೌರಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿರುವ ಮಾದರಿಯಲ್ಲಿ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಜಿವಿಎಫ್, ಕೆಜಿಐಡಿ, ಜ್ಯೋತಿ ಸಂಜೀವಿನಿ ಸೇರಿದಂತೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ವಿಸ್ತರಿಸುವ ಕುರಿತು ಶಾಸನ ಸಭೆಯಲ್ಲಿ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತಂದು ಯಥಾವತ್ ಜಾರಿಮಾಡಬೇಕೆಂಬ ಬೇಡಿಕೆಯೂ ಸೇರಿದಂತೆ ಸುಮಾರು 19 ವಿವಿಧ ಬೇಡಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕೃಷ್ಣ, ಲತಾ, ನಳಿನಿ, ಭರತ್, ಪ್ರಜ್ವಲ್, ನಂಧೀಶ್, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
