ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ನಾಯಕತ್ವದ ಗೊಂದಲ ಮತ್ತು ಸರಣಿ ಸಭೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ವಿರೋಧಿಸಿದ್ದಾರೆ.
ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವಿಜಯೇಂದ್ರ, “ಕಳೆದ ಮೂರ್ನಾಲ್ಕು ತಿಂಗಳಿನಿಂದ ಕಾಂಗ್ರೆಸ್ ಪಕ್ಷದ ಬ್ರೇಕ್ಫಾಸ್ಟ್, ಲಂಚ್ ಮತ್ತು ಡಿನ್ನರ್ ಮೀಟಿಂಗ್ಗಳ ಭರಾಟೆಯಲ್ಲಿ ರಾಜ್ಯದ ಆಡಳಿತವನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಈ ಪಕ್ಷದ ಗುಂಪುಗಾರಿಕೆ ರಾಜ್ಯವನ್ನು ಕುಲಗೆಡಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ಉಗ್ರ ಸ್ವರೂಪ ಪಡೆಯಲು ಈ ಡಿನ್ನರ್ ಮೀಟಿಂಗ್ಗಳೇ ಕಾರಣ ಎಂದು ವಿಜಯೇಂದ್ರ ಆರೋಪಿಸಿದರು.” ಡಿನ್ನರ್, ಲಂಚ್ ಮೀಟಿಂಗ್ಗಳಲ್ಲಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆದಿಲ್ಲ. ಕೇವಲ ತಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕೆಲವರು ಸಭೆ ನಡೆಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ತಂಡದವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕುರ್ಚಿಯಿಂದ ಬೀಳಿಸಲು ಕಾರ್ಯತಂತ್ರದ ಸಭೆಗಳನ್ನು ಮಾಡುತ್ತಿದ್ದಾರೆ.
ಈ ನಾಯಕತ್ವದ ಗೊಂದಲದ ಪರಿಣಾಮವಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಇದರ ದುಷ್ಪರಿಣಾಮವಾಗಿ ರೈತರು ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದರು. ನಾಯಕತ್ವದ ಗೊಂದಲದ ನಡುವೆ ಚಳಿಗಾಲದ ಅಧಿವೇಶನ ನಡೆಸುವ ಅಗತ್ಯವೇ ಇರಲಿಲ್ಲ ಎಂದು ತಿಳಿಸಿದರು.
