ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಆನೆ ಮತ್ತು ಕಾಡು ಪ್ರಾಣಿಗಳ ಉಪಟಳ ಸಮಸ್ಯೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಾಶ್ವತ ಪರಿಹಾರ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಹೌದು .. ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿಯ ಗ್ರಾಮಸ್ಥರ ನಿಯೋಗವು ಕಾಡಾನೆ ಸೆರೆ, ಕಾಡುಕೋಣ ಮತ್ತು ಕಾಡುಹಂದಿಗಳ ಉಪಟಳ ನಿಯಂತ್ರಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, 2011ರಲ್ಲಿ ಹಳ್ಳಿಗಳನ್ನೂ ಬಫರ್ ವಲಯದಲ್ಲಿ ಸೇರಿಸಲಾಗಿದೆ. ಅದೇ ರೀತಿ ಹಿಂದಿನ ಬಿಜೆಪಿ ಸರ್ಕಾರ ಡೀಮ್ಡ್ ಅರಣ್ಯ ವಿಚಾರದಲ್ಲೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸದೆ, ಸಲ್ಲಿಸಿರುವ ಪ್ರಮಾಣ ಪತ್ರದಿಂದ ಗೊಂದಲವಾಗಿದ್ದು, ಈಗ ಆ ಸಮಸ್ಯೆಯನ್ನೂ ಪರಿಹರಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

2022ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ಕುಳಿತಲ್ಲೇ ಮನೆ, ಪಟ್ಟಾ ಜಮೀನು, ಸರ್ಕಾರಿ ಕಚೇರಿ, ಶಾಲೆ, ಆಸ್ಪತ್ರೆ ಎಲ್ಲವನ್ನೂ ಡೀಮ್ಡ್ ಅರಣ್ಯದ ವ್ಯಾಪ್ತಿಗೆ ಸೇರಿಸಿದ್ದಾರೆ. ಈಗ ಎಲ್ಲೆಲ್ಲಿ ಇಂತಹ ಸಮಸ್ಯೆ ಇದೆಯೋ ಅದಕ್ಕೆ ಪರ್ಯಾಯವಾಗಿ ಬೇರೆ ಭೂಮಿ ಗುರುತಿಸಿ, ಡೀಮ್ಡ್ 2ರಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಅರಣ್ಯ ಪ್ರದೇಶದ ಪ್ರಮಾಣ ಉಳಿಸಿಕೊಂಡು ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದರು.
ಆನೆ ಹಾವಳಿಗೆ ಶಾಶ್ವತ ಪರಿಹಾರ: ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ ಹಿಡಿಯಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
