Tuesday, April 21, 2026
Homeಕ್ರೈಮ್ಚಿಕ್ಕಮಗಳೂರು: ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು: ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿಸಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನ 7 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ 11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ರೊಚ್ಚಿಗೆದ್ದ ಸ್ಥಳೀಯರು ಕಾರು ಚಾಲಕ ಸುಧಾಕರ್‌ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಇದೇ ವೇಳೆ, ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಬಳಿಕ ಗಾಯಾಳುಗಳನ್ನು ಹಾಗೂ ಚಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿದ್ದು, ಅಲ್ಲಿ ಆಕ್ರೋಶಿತ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ವಾತಾವರಣ ಪ್ರಕ್ಷುಬ್ಧಗೊಂಡಿತ್ತು.

ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು, ಗಾಯಾಳುಗಳ ಕಡೆ ಗಮನ ಹರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆಸುಮಾರು 50ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಎಎಸ್ಪಿ ಜಯಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಪೋಷಕರ ಆಕ್ರಂದನ ಆಲಿಸಿ, ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿ ಕೈ ಮುಗಿಯುತ್ತೇನೆ ಹೋಗಿ ಎಂದು ಸಮಾಧಾನ ಮಾಡಿ ಕಳಿಸಿದರು.

ಸದ್ಯ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!