ಚಿಕ್ಕಮಗಳೂರು : ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 8 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಮೃತರನ್ನು ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ಪುಟ್ಟಮ್ಮ (60) ಮತ್ತು ಮೀನಾಕ್ಷಿ (50) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಉಡೇವಾ ಗ್ರಾಮದಿಂದ ಒಟ್ಟು 9 ಮಂದಿ ಸಂಬಂಧಿಕರು ಮಂತ್ರಾಲಯ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೇಲೂರು ತಾಲೂಕು ಮತ್ತು ತರೀಕೆರೆ ತಾಲೂಕಿನವರು ಪರಸ್ಪರ ಸಂಬಂಧಿಕರಾಗಿದ್ದು, ಎಲ್ಲರೂ ಒಟ್ಟಾಗಿ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಆದರೆ ಈ ಸಂತೋಷದ ಪ್ರಯಾಣವೇ ದುರಂತವಾಗಿ ಮಾರ್ಪಟ್ಟಿದೆ.
ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಈ ಘಟನೆ ಕುಟುಂಬಸ್ಥರ ದುಃಖಕ್ಕೆ ಕಾರಣವಾಗಿದ್ದು, ಗ್ರಾಮದಲ್ಲಿ ಶೋಕ ಸಾಗರ ನಿರ್ಮಾಣವಾಗಿದೆ
