ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೂವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರ ಮೇಲೆ ಎಫ್ಐಆರ್ ದಾಖಲಿಸುವ ಮೂಲಕ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಅಂಚೆ ಮತ ಎಣಿಕೆ ಟೇಬಲ್ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳಿ ಅವರು ನೀಡಿದ ದೂರಿನ ಅನ್ವಯ ಈ ಕ್ರಮ ಜರುಗಿಸಲಾಗಿದೆ. ಮತಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ ಮತ್ತು ಟ್ರಂಕ್ಗಳ ಲಾಕ್ ಕಟ್ ಆಗಿತ್ತು ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ.
ಮತ ಪತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಂಚನೆ, ಕ್ರಿಮಿನಲ್ ಪಿತೂರಿ ಹಾಗೂ ಫೋರ್ಜರಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಅವರನ್ನು ಮೊದಲ ಆರೋಪಿ (A1), ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು ಎರಡನೇ ಆರೋಪಿ (A2) ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರನ್ನು ಮೂರನೇ ಆರೋಪಿಯನ್ನಾಗಿ (A3) ಹೆಸರಿಸಲಾಗಿದೆ.
