ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ವೋಟು ಡಕಾಯಿತಿ ಆಗಿದೆ ಎಂಬ ಪದ ಬಳಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯ ಘನತೆಯನ್ನು ತಗ್ಗಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ತರುವುದರ ಜೊತೆಗೆ ಸಂವಿಧಾನದ ಆಶಯಗಳನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನಬದ್ಧವಾದ ವ್ಯವಸ್ಥೆಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಚುನಾವಣಾ ಆಯೋಗ ಮತ್ತು ನ್ಯಾಯಾಂಗ ವ್ಯವಸ್ಥೆಗಳ ಮೂಲಕ ಡಿ.ಎನ್. ಜೀವರಾಜ್ ಶಾಸಕರಾಗಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿರುವುದನ್ನು ಪ್ರಶ್ನಿಸಿ, ಜೀವರಾಜ್ ಅವರು ಹೈಕೋರ್ಟ್ ಮೊರೆ ಹೋಗಿ ಹೋರಾಟ ನಡೆಸಿದ್ದಾರೆ. ಜೀವರಾಜ್ ಅವರ ನಿರಂತರ ಹೋರಾಟದ ಫಲವಾಗಿ ನ್ಯಾಯಾಲಯ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ನಡೆಸಿದ್ದ ಅಕ್ರಮ ಬಯಲಾಗಿದೆ. ಹೀಗಾಗಿ ತಮ್ಮ ಅಕ್ರಮ ಮುಚ್ಚಿ ಹಾಕಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗಾಗಿ ಎರಡು ಬಾರಿ ಮನವಿ ಮಾಡಿದರು ಸರ್ಕಾರ ಏಕೆ ಅನುಮತಿ ಕೊಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರ ನಿಮ್ಮ ಕೈಯಲ್ಲಿದ್ದರೂ ಇಂದು ಬಿಜೆಪಿ ವಿರುದ್ಧ ಆರೋಪ ಹೊರಸಿ ಕಾಂಗ್ರೆಸ್ ಮುಖಂಡರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ನಂತರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ವೇಳೆ 170 ತಿದ್ದಿರುವ ಮತಗಳ ಕಟ್ಟನ್ನು ರಾಜೇಗೌಡರ ಬಾಕ್ಸ್ ನಲ್ಲಿ ಏಕೆ ಹಾಕಿರಬಾರದು?. ಮೂರು ವರ್ಷದಿಂದಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ ಈಗ ಕಾಂಗ್ರೆಸ್ಸಿಗರು ತನಿಖೆಯ ನಾಟಕವಾಡುತ್ತಿದ್ದಾರೆ. ನೀವು ಯಾವ ತನಿಖೆ ಮಾಡಿದರೂ ನಾವು ಸಿದ್ಧರಿದ್ದೇವೆ. ಸತ್ಯ ಎಂದಿದ್ದರೂ ಸತ್ಯವಾಗಿಯೇ ಇರುತ್ತದೆ ಎಂದು ಹೇಳಿದರು.
