ಚಿಕ್ಕಮಗಳೂರಿನಲ್ಲಿ ಗುರುವಾರ ನಡೆದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆಯಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅಶ್ಲೀಲ ಪದಬಳಕೆ ಆರೋಪ ಹಿನ್ನೆಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ವಿರುದ್ಧ ನಗರ ಪೊಲೀಸ್ ಠಾಣೆಗೆ ಮುಸ್ಲಿಂ ಸಮುದಾಯದ ಮುಖಂಡರು ದೂರು ನೀಡಿದ್ದು, ತಕ್ಷಣ ಬಂಧನಕ್ಕೆ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನ ರಾಂಪುರದ ಬಳಿ MLC ಸಿ.ಟಿ.ರವಿ ರಸ್ತೆ ಕಾಮಗಾರಿ ವೀಕ್ಷಣೆಗೆ ಬಂದಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಗಲಾಟೆ ತಾರಕಕ್ಕೇರಿದ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡ ಸಂತೋಷ್, ಸಿಟಿ ರವಿ ಸಮ್ಮುಖದಲ್ಲೇ ಮುಸ್ಲಿಂ ಸಮುದಾಯದ ವಿರುದ್ಧ ಅತ್ಯಂತ ಅಶ್ಲೀಲ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಜಾಮಿಯಾ ಮಸೀದಿ ಅಧ್ಯಕ್ಷ ಮುದಸ್ಸಿರ್ ಪಾಷಾ ಮಾತನಾಡಿದ್ದು, ಗಲಾಟೆಯಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಸಂತೋಷ್ ಮಾತನಾಡಿದ್ದಾರೆ. ಇದು ಮುಸ್ಲಿಂ ಸಮುದಾಯದ ಘನತೆಗೆ ಧಕ್ಕೆಯಾಗಿದೆ. ನಾವು ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ನೀಡಿದ್ದೇವೆ. ಆದರೆ ಇಲ್ಲಿಯವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ಮುಸ್ಲಿಂ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಸಿದರೂ ಏಕೆ ಕ್ರಮಕೈಗೊಂಡಿಲ್ಲ ಎಂದು ಇಡೀ ಮುಸ್ಲಿಂ ಸಮುದಾಯ ನಮ್ಮನ್ನು ಪ್ರಶ್ನೆ ಮಾಡುತ್ತಿದೆ. ಈ ಕೂಡಲೇ FIR ಮಾಡಿ ಬಂಧಿಸಬೇಕು. ಇಲ್ಲಾಂದರೆ ಉಗ್ರ ಹೋರಾಟವನ್ನ ಮುಸ್ಲಿಂ ಸಮುದಾಯ ಮಾಡುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
