ಮೂಡಿಗೆರೆ : ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಡಾ. ಇಕ್ಲಾಸ್ ಅಹ್ಮದ್ ಅವರ ವರ್ಗಾವಣೆ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಹಲವು ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಅವರು ಇದೇ ಆಸ್ಪತ್ರೆಯಲ್ಲಿ ಸೇವೆ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುಮಾರು 20 ವರ್ಷಗಳಿಂದ ಬಣಕಲ್ ಮತ್ತು ಬೆಟ್ಟಗೆರೆ ಭಾಗದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಇಕ್ಲಾಸ್ ಅಹ್ಮದ್ ಅವರು ತಮ್ಮ ಸೇವಾ ಮನೋಭಾವ ಮತ್ತು ರೋಗಿಗಳೊಂದಿಗಿನ ಆತ್ಮೀಯತೆಯಿಂದ ಜನಪ್ರಿಯರಾಗಿದ್ದರು. ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಆಗಮಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಅವರು, ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಸ್ಪಂದಿಸುತ್ತಿದ್ದರು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.
ಅವರ ಚಿಕಿತ್ಸೆಯ ಮೇಲೆ ವಿಶ್ವಾಸ ಹೊಂದಿದ್ದ ಜನರು ಸ್ಥಳೀಯ ಪ್ರದೇಶಗಳಷ್ಟೇ ಅಲ್ಲದೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಇತರೆ ಹೋಬಳಿಗಳಿಂದಲೂ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಪರಿಣಾಮವಾಗಿ ಬಣಕಲ್ ಸರ್ಕಾರಿ ಆಸ್ಪತ್ರೆ ಸಾರ್ವಜನಿಕರ ವಿಶ್ವಾಸಾರ್ಹ ಆರೋಗ್ಯ ಕೇಂದ್ರವಾಗಿ ಗುರುತಿಸಿಕೊಂಡಿತ್ತು.
ಡಾ. ಇಕ್ಲಾಸ್ ಅಹ್ಮದ್ ಅವರ ವರ್ಗಾವಣೆ ಸುದ್ದಿ ಹೊರಬಿದ್ದ ಬೆನ್ನಲ್ಲೇ ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕ ಮುಖಂಡರು ಹಾಗೂ ಗ್ರಾಮಸ್ಥರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. ಈ ಭಾಗದ ಜನರ ಆರೋಗ್ಯ ಸೇವೆಯಲ್ಲಿ ಅವರ ಕೊಡುಗೆ ಮಹತ್ವದ್ದಾಗಿದ್ದು, ಅನುಭವಿ ವೈದ್ಯರ ಸೇವೆ ಮುಂದುವರಿಯುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದ ಡಾ. ಇಕ್ಲಾಸ್ ಅಹ್ಮದ್ ಅವರ ಸೇವೆಯನ್ನು ಮುಂದುವರಿಸಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
