ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಬಳಿಯ ಗೌಡಹಳ್ಳಿ ಗ್ರಾಮದಲ್ಲಿ ಸುಮಾರು 15 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಹೌದು .. ಗೌಡಹಳ್ಳಿ ಗ್ರಾಮದ ಪ್ರದೀಪ್ ಎಂಬುವರ ಮನೆಯ ಸಮೀಪ ಈ ಅಪರೂಪದ ಕಪ್ಪು ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದ್ದು, ಮನೆಯವರು ಹಾಗೂ ಅಲ್ಲಿದ್ದ ಕಾರ್ಮಿಕರು ಸರ್ಪವನ್ನು ಕಂಡು ಕೆಲಕಾಲ ಆತಂಕಕ್ಕೊಳಗಾದರು.
ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಡಗಿದ್ದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲು ಸಾಕಷ್ಟು ಸಮಯ ಬೇಕಾಯಿತು. ಸುಮಾರು ಒಂದು ಗಂಟೆಗೂ ಅಧಿಕ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಬಳಿಕ ಕೊನೆಗೂ ಸುಮಾರು 15 ಅಡಿ ಉದ್ದದ ಬೃಹತ್ ಕಪ್ಪು ಕಾಳಿಂಗ ಸರ್ಪವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸೆರೆ ಹಿಡಿಯುವಲ್ಲಿ ಸ್ನೇಕ್ ಮೊಹಮದ್ ಯಶಸ್ವಿಯಾದರು.
ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಬಳಿಕ ಅದನ್ನು ಅರಣ್ಯ ಇಲಾಖೆಯ ಮಾರ್ಗಸೂಚಿಯಂತೆ ಸುರಕ್ಷಿತವಾಗಿ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು. ಈ ಮೂಲಕ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಯಿತು.
