ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ.
ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಹೆಚ್.ಡಿ. ರೇವಣ್ಣ, ಹೆಚ್.ಡಿ. ಬಾಲಕೃಷ್ಣ, ಹೆಚ್.ಡಿ. ರಮೇಶ್ ಗೌಡ, ಹೆಚ್.ಡಿ. ಕುಮಾರಸ್ವಾಮಿ, ಶೈಲಜಾ ಹಾಗೂ ಅನಸೂಯಾ ಸೇರಿ ಒಟ್ಟು ನಾಲ್ವರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಚನ್ನಮ್ಮ ದೇವೇಗೌಡರ ರಾಜಕೀಯ ಜೀವನದ ಬೆನ್ನೆಲುಬಿನಂತಿದ್ದು, ಸದಾ ಕಾಲ ರಾಜಕೀಯದಲ್ಲಿ ಬ್ಯುಸಿಯಾಗಿದ್ದ ದೇವೇಗೌಡರಿಗೆ ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸುವ ಮೂಲಕ ಗಟ್ಟಿಗಿತ್ತಿ ಎನಿಸಿಕೊಂಡಿದ್ದರು. ಆರು ಮಕ್ಕಳನ್ನ ಸಲಹಿದ್ದಲ್ಲದೆ, ಅವರ ಶಿಕ್ಷಣದ ಜವಾಬ್ದಾರಿ ಹೊತ್ತು ಆದರ್ಶ ಗೃಹಿಣಿಯಾಗಿದ್ದರು.
2001ರ ಫೆಬ್ರವರಿ ತಿಂಗಳಲ್ಲಿ ಚನ್ನಮ್ಮ ಅವರು ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು
