ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿದೆ. ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ್ದು, ತೆಂಗು, ಅಡಿಕೆ, ಕಾಫಿ ಗಿಡಗಳನ್ನು ನಾಶಪಡಿಸಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೌದು ..
ಮರಿಗಳ ಜೊತೆ ಕಾಡಾನೆಗಳು ಸುಮಾರು 8 ಎಕರೆ ಪ್ರದೇಶದ ಕಾಫಿ ತೋಟವನ್ನು ನಾಶಪಡಿಸಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಗನ್ನಾಥ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸ್ವಾಮಿ ಎಂಬುವವರಿಗೆ ಸೇರಿದ ಜಮೀನು ಇದಾಗಿದ್ದು, ಕಾಡಾನೆಗಳ ಹಿಂಡು ಅಡಿಕೆ, ಕಾಫಿ, ಬಾಳೆ ಗಿಡಗಳನ್ನು ನಾಶ ಮಾಡಿದೆ. ಈ ಪರಿಣಾಮ ಮಾಲೀಕರಿಗೆ ಸುಮಾರು 6 ಲಕ್ಷ ರೂ.ಗೂ ಅಧಿಕ ನಷ್ಟವುಂಟಾಗಿದೆ.
ಮರಿಗಳು ಸೇರಿ ಸುಮಾರು ಇಪ್ಪತ್ತಕ್ಕೂ ಹೆಚ್ಚಿರುವ ಕಾಡಾನೆಗಳ ಹಿಂಡು ಕಾಫಿ ತೋಟದಲ್ಲೇ ಬೀಡುಬಿಟ್ಟಿದೆ. ಮರಿಗಳು ಇರುವುದರಿಂದ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಪಟಾಕಿ ಸಿಡಿಸಲು ಹಿಂದೇಟು ಹಾಕಿದ್ದಾರೆ. ಅಲ್ಲದೇ ಪಟಾಕಿ ಸಿಡಿಸಿದರೆ ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ.
