ಮೂಡಿಗೆರೆ :ತಾಲೂಕಿನ ಜಿ. ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಬೀಟಮ್ಮ ಗುಂಪಿನ ಕಾಡಾನೆಗಳು ದಾಳಿ ನಡೆಸಿ ಸುಮಾರು 2 ಎಕರೆ ಶುಂಠಿ ಬೆಳೆಯನ್ನು ತುಳಿದು ಅಪಾರ ಪ್ರಮಾಣದ ಹಾನಿ ಉಂಟುಮಾಡಿವೆ. ಕಷ್ಟಪಟ್ಟು ಬೆಳೆ ಬೆಳೆಸಿದ್ದ ರೈತರಿಗೆ ಈ ಘಟನೆ ತೀವ್ರ ಆರ್ಥಿಕ ಸಂಕಷ್ಟವನ್ನುಂಟು ಮಾಡಿದ್ದು, ಸರ್ಕಾರ ಹಾಗೂ ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗುರುವಾರ ರಾತ್ರಿ ಸಮಯದಲ್ಲಿ ಕಾಡಾನೆಗಳು ಜಿ.ಹೊಸಹಳ್ಳಿ ಗ್ರಾಮದ ಹೆಚ್ ಸಿ ಗೋಪಾಲ್ ಅವರ ಗದ್ದೆಗೆ ನುಗ್ಗಿ ಶುಂಠಿ ಬೆಳೆಯ ಬುಡಗಳನ್ನು ಬೇರು ಸಮೇತ ತುಳಿದು ನಾಶಪಡಿಸಿರುವ ಪರಿಣಾಮ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ರೈತರು ತಿಳಿಸಿದ್ದಾರೆ.
ಜಿ. ಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚೆಗೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಭಯದ ವಾತಾವರಣದಲ್ಲಿ ಕೃಷಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮಸ್ಥರು ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಂಡು ಕಾಡಾನೆಗಳನ್ನು ಅರಣ್ಯ ಪ್ರದೇಶಕ್ಕೆ ಹಿಮ್ಮೆಟ್ಟಿಸುವ ವ್ಯವಸ್ಥೆ ಮಾಡಬೇಕು, ಬೆಳೆ ನಷ್ಟಕ್ಕೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ರೈತರ ಜೀವ ಮತ್ತು ಆಸ್ತಿಯ ರಕ್ಷಣೆಗೆ ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರಬೇಕು ಗ್ರಾಮದ ಯುವ ಮುಖಂಡರ ರಂಜಿತ್ ಕುಮಾರ್ ಆಗ್ರಹಿಸಿದ್ದಾರೆ.
ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರೈತರ ನೆರವಿಗೆ ತಕ್ಷಣ ಧಾವಿಸಬೇಕೆಂದು ಸಾರ್ವಜನಿಕರು ಕೂಡ ಒತ್ತಾಯಿಸಿದ್ದಾರೆ.
