ಶೃಂಗೇರಿ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಿನ ಚಿತ್ರಣವೇ ಸಂಪೂರ್ಣವಾಗಿ ಬದಲಾಗಿದೆ. ಆರಂಭದಲ್ಲಿ ಮಳೆ ಕೊರತೆಯಿಂದ ಕಂಗಾಲಾಗಿದ್ದ ಜಿಲ್ಲೆಯಲ್ಲಿ ಇದೀಗ ಮಳೆರಾಯನ ಅಬ್ಬರ ತೀವ್ರಗೊಂಡಿದೆ.
ಶೃಂಗೇರಿ ತಾಲೂಕು ನೆರೆಯ ಹೊಸ್ತಿಲಲ್ಲಿ ಬಂದು ನಿಂತಿದೆ. ನಿರಂತರ ವರುಣಾರ್ಭಟದಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಮೈದುಂಬಿ ಉಕ್ಕಿ ಹರಿಯುತ್ತಿದ್ದು, ಜಲಾನಯನ ಪ್ರದೇಶಗಳಲ್ಲಿ ನೆರೆ ಭೀತಿ ಆವರಿಸಿದೆ. ನದಿಯ ಈ ರೌದ್ರರಮಣೀಯ ರೂಪ ಹಾಗೂ ಪ್ರಕೃತಿಯ ಅಪ್ರತಿಮ ಸೌಂದರ್ಯ ಡೋನ್ ಕ್ಯಾಮರಾದಲ್ಲಿ ಅತ್ಯಂತ ಆಕರ್ಷಕವಾಗಿ ಸೆರೆಯಾಗಿದೆ.
ಹಾಗೆ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ತುಂಗಭದ್ರಾ ಹಾಗೂ ಹೇಮಾವತಿ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನದಿ ಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಅನಗತ್ಯವಾಗಿ ಗುಡ್ಡ ಪ್ರದೇಶಗಳು ಮತ್ತು ನದಿ ತೀರಗಳಿಗೆ ತೆರಳಬಾರದು, ಅಗತ್ಯವಿದ್ದರೆ ಮಾತ್ರ ಪ್ರಯಾಣ ಮಾಡಬೇಕು ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
