ಮೂಡಿಗೆರೆ: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಪಮಾನ ಮಾಡಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆ.31ರಂದು ಬ್ಲಾಕ್ ಕಾಂಗ್ರೆಸ್, ಎಸ್ಸೀ ಹಾಗೂ ಎಸ್ಟಿ ಘಟಕದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ರವಿ ಕುನ್ನಳ್ಳಿ ಹೇಳಿದರು.
ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ದೇಶ ಕಂಡ ಉತ್ತಮ ರಾಜಕಾರಣಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಪಮಾನ ಮಾಡಿರುವುದು ಖಂಡನೀಯ. ಇದು ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಇಂದಿಗೂ ತಾಂಡವವಾಡುತ್ತಿರುವುದು ಗೋಚರಿಸುತ್ತದೆ. ಇಂತಹ ಘಟನೆ ಮುಂದೆ ಯಾವತ್ತೂ ಮರುಕಳಿಸಬಾರದೆಂದರೆ ಖರ್ಗೆ ಅವರಿಗೆ ಅಪಮಾನ ಮಾಡಿದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.
ಪ.ಪಂ. ಮಾಜಿ ಉಪಾಧ್ಯಕ್ಷ ರಮೇಶ್ ಹೊಸ್ಕೆರೆ ಮಾತನಾಡಿ, ಸ್ವಾತಂತ್ರ್ಯ ಬಂದು 80 ವರ್ಷ ಕಳೆದರೂ ಹಾಗೂ ಜಾತಿ ವ್ಯವಸ್ಥೆ ತೊಲಗಿಸಲು ಅನೇಕ ಮಹನೀಯರು ಈ ನಾಡಿನಲ್ಲಿ ಹುಟ್ಟಿದರೂ ಇಂದಿಗೂ ಜಾತಿ ವ್ಯವಸ್ಥೆ ಬೇರೂರಿರುವುದು ಬೇಸರದ ಸಂಗತಿ. ದೇಶಕ್ಕೆ ಕಂಟಕವಾಗುವವರನ್ನು ದೇಶದಿಂದಲೇ ಗಡಿಪಾರು ಮಾಡಿದಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಿ ಸ್ವಚ್ಛ ಭಾರತವಾಗಲು ಸಾಧ್ಯವೆಂದು ಹೇಳಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಎಸ್ಸೀ ಘಟಕದ ಅಧ್ಯಕ್ಷ ಸುಧೀರ್ ಚಕ್ರಮಣಿ, ಎಸ್ಟಿ ಘಟಕದ ಅಧ್ಯಕ್ಷ ಹರೀಶ್ ಸಬ್ಬೇನಹಳ್ಳಿ, ಕೆಡಿಪಿ ಸದಸ್ಯ ಸುರೇಂದ್ರ ಉಗ್ಗೇಹಳ್ಳಿ ಉಪಸ್ಥಿತರಿದ್ದರು.
