ಮೂಡಿಗೆರೆ: ಪಟ್ಟಣದ ಮಹಂತಿನ ಮಠ ಸಮುದಾಯ ಭವನದಲ್ಲಿ ಸೆ.7ರಂದು ಬೆಳಗ್ಗೆ 10.30ಗಂಟೆಗೆ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ವಾರ್ಷಿಕ ಮಹಾಸಭೆ ಹಾಗೂ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಿ.ಎಸ್.ಓಂಕಾರ್ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಜ್ಯ ಸಮಿತಿ ನಿರ್ದೇಶನದಂತೆ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಘಟಕದ ವಾರ್ಷಿಕ ಮಹಾಸಭೆ ಏರ್ಪಡಿಸಲಾಗಿದೆ. ತಾಲೂಕಿನಲ್ಲಿ 400 ಕ್ಕೂ ಅಧಿಕ ಮಂದಿ ಸದಸ್ಯರಿದ್ದು, ಸಭೆಯಲ್ಲಿ ಮಹಾಸಭಾದ ವರದಿ ಮಂಡಿಸುವ ಮೂಲಕ ಸಮಾಜದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ಶ್ರಾವಣ ಮಾಸದ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಶಶಿಕಲಾ ಮೂರ್ತಿ, ರಾಜ್ಯ ಕಾರ್ಯಕಾರಣಿ ಸಮಿತಿ ನಿರ್ದೇಶಕ ಎಂ.ಆರ್.ಪೂರ್ಣೇಶ್ ಪೂರ್ತಿ, ಜಿಲ್ಲಾಧ್ಯಕ್ಷ ಲೋಕೇಶ್, ತಾಲೂಕು ಗೌರವಾಧ್ಯಕ್ಷ ಬಿ.ಬಿ.ಬಸವರಾಜು, ಪ್ರಧಾನ ಕಾರ್ಯದರ್ಶಿ ರವಿಪಟೇಲ್ ಕೂವೆ ಸೇರಿದಂತೆ ಎಲ್ಲಾ ನಿರ್ದೇಶಕರು ಭಾಗವಹಿಸಲಿದ್ದಾರೆ. ಹಾಗಾಗಿ ಸಮಾಜದ ಎಲ್ಲಾ ಮಹಿಳಾ ಮತ್ತು ಯುವ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಣಿ ಸಮಿತಿ ನಿರ್ದೇಶಕ ಎಂ.ಆರ್.ಪೂರ್ಣೇಶ್ ಪೂರ್ತಿ, ತಾಲೂಕು ನಿರ್ದೇಶಕ ಮಂಜುನಾಥ್ ಮಹಂತಿನ ಮಠದ ಅರ್ಚಕ ಸಂಗಮೇಶ್ ಶಾಸ್ತ್ರಿ ಉಪಸ್ಥಿತರಿದ್ದರು.
