ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾಡುಕೋಣದ ಉಪಟಳದ ಬಗ್ಗೆ ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಡುಕೋಣಕ್ಕೆ ಕಣ್ಣು ಕಾಣದಿರುವುದರಿಂದ ಹಗಲು-ರಾತ್ರಿ ಎನ್ನದೆ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲೆದಾಡುತ್ತಿದೆ. ಇದುವರೆಗೆ ಯಾರಿಗೂ ಯಾವುದೇ ಹಾನಿ ಮಾಡಿಲ್ಲವಾದರೂ, ಅದರ ವಿಚಿತ್ರ ವರ್ತನೆ ಜನರಲ್ಲಿ ಆತಂಕ ಮೂಡಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಣ್ಣು ಕಾಣದ ಕಾರಣ ಕಾಡುಕೋಣವು ಕೆಲವೊಮ್ಮೆ ಗೋಡೆಗಳಿಗೆ ಡಿಕ್ಕಿ ಹೊಡೆಯುತ್ತಿದ್ದು, ಬೇಲಿ ಹಾಗೂ ಮೆಳೆಗಳ ಮೇಲೆ ನುಗ್ಗುತ್ತಿದೆ. ಇದರಿಂದ ಸಾರ್ವಜನಿಕರು ಅದರ ಸಮೀಪ ಹೋಗಲು ಭಯಪಡುವಂತಾಗಿದೆ. ಅಲ್ಲದೆ, ಗ್ರಾಮದ ಮಿನಿ ವಾಟರ್ ಸಪ್ಲೈ ಘಟಕದ ಸಮೀಪವೇ ಆಗಾಗ್ಗೆ ನಿಲ್ಲುತ್ತಿರುವುದರಿಂದ ಕುಡಿಯುವ ನೀರು ಪಡೆಯಲು ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.
ಕಾಡುಕೋಣದ ಚಲನವಲನವನ್ನು ಸ್ಥಳೀಯರು ವಿಡಿಯೋ ಮಾಡಿ ಅರಣ್ಯ ಇಲಾಖೆಗೆ ಕಳುಹಿಸಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಕಾಡುಕೋಣವನ್ನು ಸುರಕ್ಷಿತವಾಗಿ ಸೆರೆಹಿಡಿದು, ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು. ಆ ಮೂಲಕ ಕಾಡುಕೋಣಕ್ಕೂ ರಕ್ಷಣೆ ಒದಗಿಸುವುದರ ಜೊತೆಗೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಹಾಗೂ ಆತಂಕವನ್ನು ನಿವಾರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
