ಬೆಂಗಳೂರು: ವಂದೇ ಮಾತರಂ ಗೀತೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗೀತೆಯನ್ನು ಎರಡೇ ಚರಣ ಹಾಡಲು ಆದೇಶ ಹೊರಡಿಸಿದೆ.
ವಂದೇ ಮಾತರಂ ಆರು ಚರಣ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆದ ರಾಜ್ಯ ಸರ್ಕಾರ ಎರಡು ಚರಣ ಮಾತ್ರ ಹಾಡಲು ಆದೇಶಿಸಿದೆ. ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಎರಡೇ ಚರಣ ಹಾಡಲು ಆದೇಶಿಸಿದೆ.
ಸರ್ಕಾರದ ಆದೇಶದಲ್ಲೇನಿದೆ?
ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ದೇಶದ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆಯನ್ನು ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆಯು ಮಹತ್ವದ ಪಾತ್ರವನ್ನು ವಹಿಸುತ್ತದೆ.
ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತ ಸರ್ಕಾರದ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.
