ಕಲಬುರಗಿ : ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ನನ್ನನ್ನು ಮುಗಿಸ್ತೀನಿ ಅಂದುಕೊಂಡಿದ್ದರೆ ಅದು ಅವರ ಮೂರ್ಖತನ. ನನ್ನನ್ನು ಅಷ್ಟು ಸುಲಭ ಅಂದುಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ BJP ಮತ್ತು JDS ನಾಯಕರಿಗೆ ನೇರ ಸವಾಲೆಸೆದರು.
ಕಲಬುರಗಿ ತಾಲ್ಲೂಕಿನ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಜಯಂತ್ಸೋತ್ಸವ ಉದ್ಘಾಟಿಸಿ ಮಾತನಾಡಿದರು.
ಬ್ರಿಟೀಷರ ಜೊತೆ ನಮ್ಮವರು ಕೈಜೋಡಿಸಿದ್ದರಿಂದಲೇ 200 ವರ್ಷ ಗುಲಾಮಗಿರಿ ಅನುಭವಿಸಿದೆವು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟವರು ನಮ್ಮವರೇ ಆದ ಮನೆ ಮುರುಕರು. ನಮ್ಮ ಸಮಾಜದಲ್ಲೇ ಇಂಥಹ ಮನೆ ಮುರುಕರು ಹಿಂದೆಯೂ ಇದ್ದರು. ಮುಂದೆಯೂ ಇರುತ್ತಾರೆ. ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.
ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬಡವರ, ಮದ್ಯಮ ವರ್ಗದವರ ಕಲ್ಯಾಣಕ್ಕೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಕ್ಕೆ ಪಟ್ಟಭದ್ರರು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
40 ವರ್ಷದಿಂದ ಸಣ್ಣ ತಪ್ಪು ಮಾಡದವನು ಈಗ ಮಾಡ್ತೀನಾ? ಹಿಂದೆಯೂ ಮಾಡಿಲ್ಲ, ಮುಂದೆಯೂ ಮಾಡಲ್ಲ.
ಮುಡಾ ಪ್ರಕರಣದಲ್ಲಿ ಏನೇನೂ ಇಲ್ಲ. ಆದರೂ BJP, JDS ನಾಯಕರು ಡೆಲ್ಲಿಯಿಂದ ರಾಜಭವನದವರೆಗೂ ಪಿತೂರಿ ಹೆಣೆಯುತ್ತಿದ್ದಾರೆ. ಇದರಲ್ಲಿ ಅವರು ಯಶಸ್ವಿ ಆಗಲು ಬಿಡಬಾರದು. ಸಂಗೊಳ್ಳಿರಾಯಣ್ಣನ ಹೋರಾಟದ ಕಿಚ್ಚು ನಮ್ಮೊಳಗಿದೆ ಎಂದು ಎಚ್ಚರಿಸಿದರು. ಡಾ.ಬಾಬಾ ಸಾಹೇಬರು ಕೊಟ್ಟ ಸಂವಿಧಾನದಿಂದಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ. ಬಾಬಾ ಸಾಹೇಬರ ಆಶಯದಂತೆ ನಾನು ಎಲ್ಲಾ ಜಾತಿ, ಜನ ವರ್ಗಗಳಿಗೆ, ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದೇನೆ ಎಂದರು.






