ಮೈಸೂರು : ಮುಡಾ ಅಕ್ರಮಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆ ಪ್ರಕಾರ ನ್ಯಾಯಾಲಯದಿಂದ ಆದೇಶ ಪ್ರತಿ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಎ1 ಸಿದ್ದರಾಮಯ್ಯ, ಎ2 ಪಾರ್ವತಿ, ಎ3 ಮಲ್ಲಿಕಾರ್ಜುನ ಸ್ವಾಮಿ, ಎ4ದೇವರಾಜು ಅವರ ಹೆಸರು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಮುಂದೆ ಆರೋಪಿಗಳಿಗೆ ನೋಟಿಸ್ ನೀಡಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
ರಾಜೀನಾಮೆಗೆ ಹೆಚ್ಚಿದ ಒತ್ತಡ : ತನಿಖೆಗೆ ನ್ಯಾಯಾಲಯ ಆದೇಶಿಸುತ್ತಿದ್ದಂತೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ವ್ಯಕ್ತವಾಗಿತ್ತು. ಈ ಸಂಬಂಧಿತವಾಗಿ ಬಿಜೆಪಿ, ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸಿತ್ತು. ಇದೀಗ ಎಫ್ಐಆರ್ ದಾಖಲಾಗಿರುವ ಕಾರಣ ರಾಜೀನಾಮೆ ನೀಡುವಂತೆ ಒತ್ತಡ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
