ಬೆಂಗಳೂರು : ಮಾನನಷ್ಟ ಪ್ರಕರಣ ಸಂಬಂಧ ಕಾನೂನು ಹೋರಾಟ ನಡೆಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗೀಲ್ ಅವರಿಗೆ ತಮ್ಮ ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯ ಸಲಹೆ ನೀಡಿದೆ.
ರೂಪಾ ಅವರು ಫೇಸ್ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್ ಪ್ರಕಟಿಸಿ ತೇಜೋವಧೆ ಮಾಡಿದ್ದಾರೆ. ಅವರಿಂದ 1 ಕೋಟಿ ರು. ಪರಿಹಾರ ಕೊಡಿಸಿಕೊಡಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕೆಂದು ರೋಹಿಣಿ ಸಿಂಧೂರಿ 2023ರ ಮಾ.3ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಖಾಸಗಿ ದೂರು ದಾಖಲಿಸಿದ್ದರು. ನ್ಯಾಯಾಧೀಶ ವಿಜಯ ಕಮಾರ್ ಜಾಟ್ಲಾ ಅವರ ಪೀಠದಲ್ಲಿ ವಿಚಾರಣೆ ನಡೆಯಿತು. ರೋಹಿಣಿ ಮನವಿ ಮೇರೆಗೆ ಪಾಟಿ ಸವಾಲು ಪ್ರಕ್ರಿಯೆಯನ್ನು ನ್ಯಾಯಾಲಯ ಗೌಪ್ಯವಾಗಿ ನಡೆಸಿತು. ರೂಪಾ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರು ಸುಮಾರು 45 ನಿಮಿಷಗಳ ಕಾಲ ರೋಹಿಣಿ ಅವರನ್ನು ಪಾಟಿ ಸವಾಲಿಗೆ ಒಡ್ಡಿದರು.
ಬಳಿಕ ರೋಹಿಣಿ ಮತ್ತು ರೂಪಾರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ನೀವಿಬ್ಬರೂ ಸರ್ಕಾರದಲ್ಲಿ ಹಿರಿಯ ಅಧಿಕಾರಿಗಳು. ನೀವು ಸಮಾಜಕ್ಕೆ ಸೇವೆ ಮಾಡಬೇಕು. ನಿಮ್ಮ ಸಮಯವನ್ನು ಸಮಾಜ ಮತ್ತು ಸಾರ್ವಜನಿಕರ ಸೇವೆಗೆ ಬಳಸಬೇಕು. ಅದು ಬಿಟ್ಟು ಕೋರ್ಟ್ ಕಲಾಪಕ್ಕೆ ಬಂದು ಅಮೂಲ್ಯವಾದ ಸಮಯ ವ್ಯರ್ಥ ಮಾಡಬಾರದು. ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಆಲೋಚಿಸಿ ಅಂತ ಹೇಳಿದರು. ಸಮಾಜದ ಹಿತ ದೃಷ್ಟಿಯಿಂದ ಹೇಳಿದ್ದೇನೆ ಅಷ್ಟೇ. ನೀವು ಯೋಚಿಸಿ ನಿರ್ಧಾರದ ತಿಳಿಸಿದರೆ, ಅದರಂತೆ ಪ್ರಕರಣವನ್ನು ನ್ಯಾಯಾಲಯ ಮುಂದುರಿಸಲಿದೆ’ ಎಂದರು. ‘ಇಂಗ್ಲಿಷ್ನಲ್ಲಿ ‘ಒನ್ ಮಿನಿಟ್ ಅಪಾಲಜಿ’ ಪುಸ್ತಕ ಇದೆ. ಅದನ್ನು ನೀವಿಬ್ಬರು ಓದಿ. ಅದರಿಂದ ನಿಮಗೆ ಏನಾದರೂ ಪ್ರಯೋಜನವಾಗಬಹುದು’ ಎಂದು ನ್ಯಾಯಾಧೀಶರು ಹೇಳಿದರು. ಬಳಿಕ ಪ್ರಕರಣ ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದರು.
ಪಾಟಿ ಸವಾಲು ನಡೆಸಿದ ಸಂದರ್ಭ ಕೋರ್ಟ್ ಹಾಲ್ ಒಳಗಿದ್ದ ವಕೀಲರು, ಕೋರ್ಟ್ ಸಿಬ್ಬಂದಿ, ಪೊಲೀಸರು, ಇತರೆ ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು, ಸಿಂಧೂರಿ ಪತಿ ಸುಧೀರ್ ರೆಡ್ಡಿ ಮತ್ತು ರೂಪಾ ಪತಿ ಮನೀಷ್ ಮೌದ್ಗಿಲ್ರನ್ನು ಹೊರಕಳುಹಿಸಲಾಯಿತು.
