ಹಾಸನ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.

ಬೆಂಗಳೂರು ಸಂಜಯ ನಗರದ ಮೀನಾಕ್ಷಿ ಹಾಗೂ ಚನ್ನರಾಯಪಟ್ಟಣ ಮೂಲದ ಪ್ರತಾಪ್ ಮೃತ ದುರ್ದೈವಿಗಳು.
ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ಟೊಯೋಟಾ ಕ್ಯಾಮ್ರಿ ಕಾರು ಹಾಗೂ ಹಾಸನದ ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ 2 ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.