ಚಿಕ್ಕಮಗಳೂರು: ಅರ್ಹತೆ ಇಲ್ಲದ ತಾಯಿಗೆ ಅಕ್ರಮವಾಗಿ ಬಸವ ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಸಿಕೊಂಡಿದ್ದ ಬಿಲ್ ಕಲೆಕ್ಟರ್ ಹಾಗೂ ಪಿಡಿಒಗೆ ಶಿಕ್ಷೆ ವಿಧಿಸಲಾಗಿದೆ ಹಾಗೆ ತಲಾ ಒಂದು ವರ್ಷ ಸಜೆ, 15 ಸಾವಿರ ರೂ. ದಂಡ ವಿಧಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ತೀರ್ಪು ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕೆಳಗೂರು ಗ್ರಾಮ ಪಂಚಾಯಿತಿಯಲ್ಲಿ 2010-11ನೇ ಸಾಲಿನಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಎಂ.ಎನ್.ಮಂಜುನಾಥ್ ತನ್ನ ತಾಯಿಗೆ ಅರ್ಹತೆ ಇಲ್ಲದಿದ್ದರೂ ಸರ್ಕಾರದ ಬಸವ ವಸತಿ ಯೋಜನೆಯಡಿ ಕಾನೂನು ಬಾಹಿರವಾಗಿ ಮನೆ ಮಂಜೂರು ಮಾಡಿಸಿಕೊಂಡು ಈ ಸಂಬಂಧ ಸರ್ಕಾರದಿಂದ ಬಿಡುಗಡೆಯಾದ ಹಣವನ್ನೂ ಪಡೆದುಕೊಂಡಿದ್ದರು. ಗ್ರಾಮ ಪಂಚಾಯಿತಿಯಲ್ಲಿ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭ ಮಂಜುನಾಥನ ತಾಯಿಯನ್ನು ಆಯ್ಕೆ ಮಾಡಿರಲಿಲ್ಲ. ಆದರೆ ಫಲಾನುಭವಿಗಳ ಪಟ್ಟಿಯನ್ನು ತಾಲ್ಲೂಕು ಪಂಚಾಯಿತಿಗೆ ಸಲ್ಲಿಸುವ ಸಂದರ್ಭ ಮಂಜುನಾಥ ಅಂದಿನ ಪಿಡಿಒ ಕೆ.ಎಂ.ಲಕ್ಷ್ಮಣಗೌಡ ಜೊತೆ ಸೇರಿ ತನ್ನ ತಾಯಿಯ ಹೆಸರನ್ನು ಸೇರಿಸಿದ್ದರು.
ಈ ಸಂಬಂಧ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅಂದಿನ ಲೋಕಾಯುಕ್ತ ಡಿವೈಎಸ್ಪಿ ಪ್ರಸನ್ನ ವಿ.ರಾಜು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರು ಆರೋಪಿ ವಿರುದ್ಧ ತನಿಖಾ ಅಂಶಗಳು ದೃಢವಾಗಿರುವುದರಿಂದ ಈ ತೀರ್ಪು ನೀಡಿದ್ದಾರೆ.