ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ನಗರ ಮತ್ತು ತಾಲ್ಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಉಪಟಳ ಹಾಗೂ ಬಿಡಾಡಿ ದನಗಳ ತೊಂದರೆಗಳ ಬಗ್ಗೆ ಸಾರ್ವಜನಿಕರಿಂದ ನಗರಸಭೆ ಮತ್ತು ತಾಲ್ಲೂಕು ಪಂಚಾಯಿತಿಗೆ ಹಲವಾರು ದೂರು ಬಂದ ಹಿನ್ನೆಲೆಯಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದರು.
ಕಸಬಾ ಹೋಬಳಿ ಇಂದಾವರ ಗ್ರಾಮದ ಸರ್ವೆ ನಂ.೩೬ ರಲ್ಲಿ ೧೫ ಎಕರೆ ಜಾಗವನ್ನು ಪಶುಸಂಗೋಪನೆ ಇಲಾಖೆಗೆ ಮೀಸಲಿಟ್ಟಿದ್ದು, ಅದರಲ್ಲಿ ಎರಡು ಎಕರೆ ಜಾಗದಲ್ಲಿ ಬೀದಿನಾಯಿಗಳನ್ನು ಪಳಗಿಸಿ ಚಿಕಿತ್ಸೆ ನೀಡಲು ಸಂಬಂಧಿಸಿದ ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಸಂಬಂಧ ಇನ್ನೊಂದು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಬೀದಿನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೀಡಿ ಪುನಹಾ ಸ್ವಸ್ಥಾನಕ್ಕೆ ಬೀದಿನಾಯಿಗಳನ್ನು ತಂದು ಬಿಡಲಾಗುವುದು ಎಂದು ತಿಳಿಸಿದರು. ವರ್ಷದಲ್ಲಿ ಎರಡು ಬಾರಿ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೀಡಿದರೆ ಬೀದಿನಾಯಿಗಳ ಸಂತತಿ ಕಡಿಮೆಯಾಗುತ್ತದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ಹೇಳಿದರು.
ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಬೀದಿನಾಯಿಗಳ ಉಪಟಳದಿಂದ ನಾಗರೀಕರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡು ಅವುಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಮೀನಾನಾಗರಾಜ್, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನ, ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷಕರಾದ ನಾಗಪ್ಪ, ರಂಗಪ್ಪ, ಇಂಜಿನಿಯರ್ ಲೋಕೇಶ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಮೋಹನ್ ಕುಮಾರ್, ಪ್ರಾಣಿ ದಯಾ ಸಂಘದ ನಳಿನಾ ಡಿಸಾ ಮತ್ತಿತರರು ಭಾಗವಹಿಸಿದ್ದರು.