Tuesday, August 11, 2026
Homeಜಿಲ್ಲಾಸುದ್ದಿಮೂಡಿಗೆರೆ: ರಸ್ತೆಗುಂಡಿ ಮುಚ್ಚುವಂತೆ ಆಗ್ರಹ: ಆ.13ರಂದು ಬಿಜೆಪಿ -ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ!

ಮೂಡಿಗೆರೆ: ರಸ್ತೆಗುಂಡಿ ಮುಚ್ಚುವಂತೆ ಆಗ್ರಹ: ಆ.13ರಂದು ಬಿಜೆಪಿ -ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ!

Telegram Group
Join Now

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ರಸ್ತೆಗಳಲ್ಲಿಯೂ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ವಾಹನ ಹಾಗೂ ಜನ ಸಂಚಾರ ಸಾಧ್ಯವಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ರಸ್ತೆಗುಂಡಿ ಮುಚ್ಚುವಂತೆ ಒತ್ತಾಯಿಸಿ ಆ. 13ರಂದು ಆಲ್ದೂರ್ ‌ ಹೋಬಳಿಯ ಜೋಳದಾಳು ಸರ್ಕಲ್ ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ರಸ್ತೆ ತಡೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಬಳಿಕ ಮೂಡಿಗೆರೆ ಕ್ಷೇತ್ರದ ಎಲ್ಲ ತಾಲೂಕು ಹಾಗೂ ಹೋಬಳಿ ಕೇಂದ್ರದಲ್ಲಿಯೂ ಹೋರಾಟ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು.

ಚಿಕ್ಕಮಗಳೂರು-ಮಲ್ಲಂದೂರು ರಸ್ತೆ, ವಸ್ತಾರೆ -ಆಲ್ದೂರು- ಬಾಳೆಹೊನ್ನೂರು ರಸ್ತೆ, ಹಾಂದಿ- ಬಸ್ಕಲ್- ಗೆಂಡೆಹಳ್ಳಿ ರಸ್ತೆ ಸೇರಿದಂತೆ ಪ್ರತಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿಗಳು ಬಾಯಿ ತೆರೆದು ನಿಂತಿದ್ದು, ಮೃತ್ಯುವಿಗೆ ಅಹ್ವಾನ ನೀಡುವಂತಿವೆ. ಕಳೆದ ಎರಡು ವರ್ಷದಿಂದ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಿಲ್ಲ. ಈಗ ಪ್ರಶ್ನೆ ಮಾಡಿದರೆ ಮಳೆಗಾಲ ಎನ್ನುತ್ತಿದ್ದಾರೆ. ಆದರೆ ಬೇಸಿಗೆಯಲ್ಲಿ ರಸ್ತೆ ಗುಂಡಿ ಮುಚ್ಚಬೇಕು ಎಂಬ ಅರಿವು ಶಾಸಕರಿಗಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಬೇಕು. ಅದನ್ನು ಬಿಟ್ಟು ತಮ್ಮ ತೋಟ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೆಲಿಕಾಪ್ಟರ್ ನಲ್ಲಿ ಓಡಾಡಿದರೆ ಸ್ಥಳೀಯ ಸಮಸ್ಯೆಗಳು ಅರಿವಿಗೆ ಬರುವುದಿಲ್ಲ. ಇನ್ನು ಮೂಡಿಗೆರೆ ಶಾಸಕರಿಗೆ ಅಭಿವೃದ್ಧಿ ಬಗ್ಗೆ ಚಿಂತನೆಯೇ ಇಲ್ಲ. ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ಗುಂಡಿ ಮುಚ್ಚಲು ಅನುದಾನ ನೀಡದ ಸಿಎಂ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಶಾಸಕಿ ನಯನ ಮೋಟಮ ಅವರ ಪ್ರತಿಕೃತಿ ದಹಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನೆಲ್ಲ ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗ ಮಾಡಿದೆ. ಇದರಿಂದಾಗಿ ಸರ್ಕಾರಕ್ಕೆ ರಸ್ತೆ ಗುಂಡಿ ಮುಚ್ಚಲು ಹಣವಿಲ್ಲದ ಸ್ಥಿತಿ ಬಂದಿದೆ. ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿಯಿಂದಾಗಿ ಕಾಫಿ, ಕಾಳು ಮೆಣಸು, ಅಡಕೆ ಬೆಳೆಗಳು ಕೊಳೆರೋಗಕ್ಕೆ ತುತ್ತಾಗಿ ರೈತರು ಬೆಳೆ ಕಳೆದುಕೊಳ್ಳುತ್ತಿದ್ದಾರೆ. ಕೂಡಲೇ ಈ ರೈತರಿಗೆ ಪರಿಹಾರ ನೀಡಬೇಕು. ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿ ಮೀರಿದೆ.

ಕಾಡುಕೋಣ ಹಾಗೂ ಕಾಡಾನೆಗಳ ದಾಳಿ ಹೆಚ್ಚಾಗಿದೆ. ಕಾಡಾನೆಯಿಂದ ಈಗಾಗಲೇ ಎರಡು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ವನ್ಯಪ್ರಾಣಿಗಳ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಈ ಎಲ್ಲಾ ಕಾರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಆಲ್ದೂರು ಮಂಡಲ ಅಧ್ಯಕ್ಷ ರವಿ ಬಸರವಳ್ಳಿ, ಜೆಡಿಎಸ್ ಮುಖಂಡರಾದ ಮಲ್ಲೇಶ ಗೌಡ, ಎಚ್.ಎನ್.ಕೃಷ್ಣೇಗೌಡ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments