ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು. ಭಾರೀ ಮಳೆಯಿಂದಾಗಿ 7 ಕಿ.ಮೀ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಸಕಲೇಶಪುರ ತಾಲೂಕಿನ ಎಡಕುಮಾರಿ ಸಮೀಪ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಬೆಂಗಳೂರು ಟು ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್ ಆಗಿದೆ.
ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಇದಲ್ಲದೇ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತವಾಗಿದೆ. ಮರ, ಗಿಡಗಳ ಸಮೇತ ರಸ್ತೆಗೆ ಮಣ್ಣು ಕುಸಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ.
ಹಾಸನದ ಸಕಲೇಶಪುರದ 7 ಕಿ.ಮೀ ವ್ಯಾಪ್ತಿಯಲ್ಲೇ 15 ಕಡೆ ಭೂಕುಸಿತವಾಗಿದೆ. ಎಡಕುಮಾರಿ ಸಮೀಪ ಹಳಿ ಮೇಲೆ ಮಣ್ಣು ಕುಸಿದು ಬೆಂಗಳೂರು ಟು ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಸ್ಥಗಿತವಾಗಿದೆ. ಮತ್ತೊಂದೆಡೆ ಇದೇ ಮಾರನಹಳ್ಳಿ ಸಮೇಪ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಮಳೆ ನಡುವೆಯೂ ಪೊಲೀಸರು ಕಾರಿನಲ್ಲಿದ್ದವರನ್ನ ರಕ್ಷಿಸಿದ್ದಾರೆ.
ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ಕೊಪ್ಪದ ಭೈರೇದೇವರು ಗ್ರಾಮದಲ್ಲಿ ಮರ ಬಿದ್ದು ಮನೆಗೆ ಹಾನಿಯಾಗಿದೆ. ಭಾಸ್ಕರ್ ಭಟ್ ಎಂಬುವರ ಮನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಮುಂದಿನ ನಾಲ್ಕು ದಿನ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆಯಿದ್ದು, ಪ್ರವಾಸಿಗರು ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ. ಅತ್ತ ಕೋಲಾರ, ವೇಮಗಲ್, ಮಾಲೂರಿನಲ್ಲಿ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯಾದ್ಯಂತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
