ಮೂಡಿಗೆರೆ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–173ರ ಹೊರಟ್ಟಿ ಗ್ರಾಮದ ಬಡವನದಿಣ್ಣೆ ಬಳಿ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ತಾಲ್ಲೂಕಿನ ಬಾಳೂರು ಹೋಬಳಿಯ ಕೂವೆ ಗ್ರಾಮದ ಹುಯಿಲುಮನೆಯ ಅಕ್ಷಯ್ (25) ಮೃತಪಟ್ಟವರು. ಅದೇ ಗ್ರಾಮದ ವಿಕಾಸ್ ಗಾಯಗೊಂಡಿದ್ದಾರೆ.
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಬ್ಬೇನಹಳ್ಳಿ ಗ್ರಾಮದ ಬಳಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬಂದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಕಾರಿನಲ್ಲಿ ಸಿಲುಕಿದ್ದ ಅಕ್ಷಯ್ ಹಾಗೂ ವಿಕಾಸ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆ ತಲುಪುವ ವೇಳೆಗೆ ಅಕ್ಷಯ್ ಸಾವನ್ನಪ್ಪಿದ್ದಾರೆ.
ಇನ್ನೊಂದು ಕಾರಿನಲ್ಲಿದ್ದವರಿಗೂ ಗಾಯಗಳಾಗಿದ್ದು, ಹಾಸನ, ಬೆಂಗಳೂರು ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ. ತಾಲ್ಲೂಕಿ ನಲ್ಲಿ ಜಿಟಿ–ಜಿಟಿ ಮಳೆಯಾಗುತ್ತಿದ್ದು, ದಟ್ಟವಾದ ಮಂಜು ಆವರಿಸುತ್ತಿರುವುದರಿಂದ ವಾಹನ ಸವಾರರು ಜಾಗೃತಿಯಾಗಿ ವಾಹನ ಚಲಾಯಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
