ಹಾಸನ: ಗಣೇಶೋತ್ಸವ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದ ಹಾಸನದ ಮೊಸಳೆ ಹೊಸಳ್ಳಿಗೆ ಸಚಿವ ಕೃಷ್ಣಬೈರೇಗೌಡ ಶನಿವಾರ ಭೇಟಿ ನೀಡಿ ಸ್ಥಳೀಯರು ಹಾಗೂ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.ಇದೇ ವೇಳೆ, ದುರಂತ ಸಂಭವಿಸಿದ ಸ್ಥಳದಲ್ಲಿ ಜನರು ಪರಿಹಾರ ಕಡಿಮೆ ಎಂಬ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದರು.
ಹಾಸನ ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿ 373 ರ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನ ಮೃತ ಪಟ್ಟಿದ್ದಾರೆ.
ದುರಂತಕ್ಕೆ ಟ್ರಕ್ ಚಾಲಕ ಭುವನ್ ಅವರ ಬೇಜವಾಬ್ದಾರಿ ತನವೇ ಕಾರಣ. ಅಲ್ಲದೆ, ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೀಗಾಗಿ ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ.
ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರೂ ಸಹ ಪತ್ರ ಬರೆಯಲಿದ್ದಾರೆ. ಅಲ್ಲದೆ, ದುರಂತದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆಯೂ ಪತ್ರದಲ್ಲಿ ಒತ್ತಾಯಿಸಲಾಗುವುದು ಎಂದು ಹಾಸನ ಉಸ್ತುವಾರಿ ಸಚಿವರು, ಕಂದಾಯ ಸಚಿವರು ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
