ಕಳಸ: ತಾಲ್ಲೂಕಿನ ಕಂದಾಯ ಭೂಮಿ ಅತಿಕ್ರಮಣ ತಡೆದು ಜನರ ಉಪಯೋಗಕ್ಕೆ ಉಳಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪಟ್ಟಣದಲ್ಲಿ ಸೋಮವಾರ ಧರಣಿ ನಡೆಯಿತು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿಪಿಐ ಕಾರ್ಯಕರ್ತರು ಮೆರವಣಿಗೆ ನಡೆಸಿ, ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಅಲ್ಲಿ ಮಾತನಾಡಿದ ಸಿಪಿಐ ಮುಖಂಡ ಲಕ್ಷ್ಮಣಾಚಾರ್, ಕಳಸದ ಮಾವಿನಕೆರೆ ಗ್ರಾಮದ ಸರ್ವೆ ನಂಬರ್ 641ರಲ್ಲಿ ಬಹಳಷ್ಟು ಸರ್ಕಾರಿ ಭೂಮಿಯನ್ನು ಕಬಳಿಸಲಾಗಿದೆ. ಈ ಬಗ್ಗೆ ಹಿಂದಿನ 12 ತಹಶೀಲ್ದಾರರಿಗೆ ಮನವಿ ಕೊಟ್ಟರೂ ಪ್ರಯೋಜನ ಆಗಿಲ್ಲ.
ಕಳಸ ತಾಲ್ಲೂಕು ಕೇಂದ್ರ ಆಗಿರುವ ಹಿನ್ನೆಲೆಯಲ್ಲಿ ಅನೇಕ ಸರ್ಕಾರಿ ಕಟ್ಟಡಗಳಿಗೆ ಜಾಗವೇ ಇಲ್ಲವಾಗಿದೆ. ಆದರೆ ಕಳಸ ಪಟ್ಟಣದ ಹತ್ತಿರ ಸರ್ವೆ ನಂಬರ್ 641ರಲ್ಲಿ ಸಾಕಷ್ಟು ಭೂಮಿ ಇದ್ದರೂ ಅದನ್ನು ಬಳಕೆ ಮಾಡಲು ಒತ್ತುವರಿ ಸಮಸ್ಯೆ ಅಡ್ಡಿ ಆಗಿದೆ ಎಂದು ದೂರಿದರು.
ಸಿಪಿಐ ಮುಖಂಡ ಕೆಳಗೂರು ರಮೇಶ್ ಮಾತನಾಡಿ, ಕಳಸ ತಾಲ್ಲೂಕಿನಲ್ಲಿ 10 ಸಾವಿರ ಎಕರೆಗೂ ಹೆಚ್ಚು ಅಕ್ರಮ ಭೂಮಿ ಮಂಜೂರಾತಿ ಆಗಿದ್ದು, ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಆಗಬೇಕು ಎಂದು ಪಕ್ಷ ಆಗ್ರಹಿಸಿತ್ತು. ಸರ್ಕಾರ ಶಿಸ್ತು ಕ್ರಮದ ಪ್ರಕ್ರಿಯೆ ಆರಂಭಿಸಿದೆ ಎಂದರು.
