ಆನೇಕಲ್ : ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹೆಬ್ಬಗೋಡಿಯ ವಿನಾಯಕ ನಗರದಲ್ಲಿ ನಡೆದಿದೆ.
ಶ್ರೀಗಂಗಾ(29) ಕೊಲೆಯಾದ ಮಹಿಳೆ. ಮೋಹನ್ ರಾಜು(32) ಆರೋಪಿ ಪತಿ. ತನ್ನ 6 ವರ್ಷದ ಮಗುವನ್ನ ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭ ಹೆಂಡತಿಯನ್ನು ಅಡ್ಡಗಟ್ಟಿ ಚಾಕುವಿನಿಂದ ಆರೇಳು ಬಾರಿ ಇರಿದು ಕೊಂದಿದ್ದಾನೆ. ತಿರುಪಾಳ್ಯ ನಿವಾಸಿಗಳಾಗಿರುವ ಶ್ರೀಗಂಗಾ ಹಾಗೂ ಮೋಹನ್ ರಾಜು 7 ವರ್ಷದ ಹಿಂದೆ ಮದುವೆಯಾಗಿದ್ದರು. ಈ ನಡುವೆ ಶ್ರೀಗಂಗಾ ತನ್ನ ಸ್ನೇಹಿತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂಬ ಅನುಮಾನ ಮೋಹನ್ ರಾಜ್ಗೆ ಇತ್ತು. ಹೀಗಾಗಿ ಇಬ್ಬರ ನಡುವೆ ಗಲಾಟೆಯೂ ಆಗಿತ್ತು.
ಹೀಗಾಗಿ 8 ತಿಂಗಳಿನಿಂದ ಮೋಹನ್ ರಾಜ್ ಹಾಗೂ ಶ್ರೀಗಂಗಾ ದೂರವಾಗಿದ್ದರು. ಫೆಬ್ರವರಿ 04ರಂದು ರಾತ್ರಿ ಮೋಹನ್ ರಾಜ್ ತನ್ನ ಮಗುವನ್ನ ನೋಡಲು ಶ್ರೀಗಂಗಾಳ ಮನೆಗೆ ತೆರಳಿದ್ದ ಎನ್ನಲಾಗಿದೆ. ಆಗಲೂ ಗಂಡ ಹೆಂಡತಿ ಮಧ್ಯೆ ಮತ್ತೆ ಗಲಾಟೆ ಆಗಿದೆ. ಆಕೆ ಮೇಲೆ ಸಿಟ್ಟುಗೊಂಡಿದ್ದ ಮೋಹನ್ ರಾಜ್ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾನೆ. ಇಂದು ಬೆಳಗ್ಗೆ ಶ್ರೀಗಂಗಾ ಮಗುವನ್ನ ಶಾಲೆಗೆ ಬಿಡಲು ಬೈಕ್ನಲ್ಲಿ ಬರುವುದನ್ನೇ ಕಾದು ಕುಳಿತ ಆತ ಏಕಾಏಕಿ ಚಾಕುವಿನಿಂದ ಅಟ್ಯಾಕ್ ಮಾಡಿದ್ದಾನೆ.
ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದ ಶ್ರೀಗಂಗಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಂಗಾ ಕೊನೆಯುಸಿರೆಳೆದಿದ್ದಾಳೆ. ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಮಾಹಿತಿ ನೀಡಿದ್ದಾರೆ. ಮೋಹನ್ ರಾಜ್ ಹಾಗೂ ಆತನ ಸ್ನೇಹಿತ ಒಂದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಈ ಹಿಂದೆ ಪತಿಯ ಸ್ನೇಹಿತನನ್ನ ಮನೆಯಲ್ಲಿ ಇರಿಸಿಕೊಂಡಿದ್ದರು. ಈ ವೇಳೆ ಪತಿಯ ಸ್ನೇಹಿತ ಹಾಗೂ ಮೃತಳ ನಡುವೆ ಸಂಬಂಧ ಇದೆ ಎಂದು ಗಲಾಟೆ ಆಗಿದೆ. ನಂತರ ಪತಿ ಪತ್ನಿ ದೂರವಾಗಿದ್ದರು. ಕಳೆದ ರಾತ್ರಿ ಮಗುವನ್ನ ನೋಡಲು ಬಂದಾಗ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಇದರಿಂದ ಕೋಪಗೊಂಡು ಇಂದು ಬೆಳಗ್ಗೆ ಚಾಕು ಇರಿದು ಕೊಂದಿದ್ದಾನೆ ಎಂದು ಮಾಹಿತಿಯಿತ್ತಿದ್ದಾರೆ.
