ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಸಿಎಂ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರಿನ ವಿಚಾರಣೆ ಮುಕ್ತಾಯಗೊಂಡಿತ್ತು. ಈ ನಡುವೆ ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪಿಗೆ ತಡೆ ನೀಡಿತ್ತು.
ಮಂಗಳವಾರ ಹೈಕೋರ್ಟ್ ಆದೇಶ ಹೊರಬಿದ್ದಿತ್ತು. ಜತೆಗೆ ಕೆಳ ಹಂತದ ನ್ಯಾಯಾಲಯಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಲಾಗಿತ್ತು. ಹೀಗಾಗಿ ಬುಧವಾರ ಖಾಸಗಿ ದೂರಿನ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದೆ. 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶಿಸಿದ್ದಾರೆ. ಪ್ರಕರಣದ ತನಿಖೆಯನ್ನು ಡಿಸೆಂಬರ್ 24ಕ್ಕೆ ಮುಂದೂಡಲಾಗಿದೆ.
ಈ ಪ್ರಕರಣದಲ್ಲಿ ದೂರುದಾರರ ಪರವಾಗಿ ಹಿರಿಯ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿದ್ದರು.

