ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ನ 13ನೇ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಮಾತ್ರ ಉಳಿದಿದ್ದು, ಈವರೆಗೂ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಮನವಿ ಸಲ್ಲಿಸಿಲ್ಲ ಎಂದು ಅರಣ್ಯ ಮತ್ತು ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ರಾಜ್ಯದಲ್ಲಿನ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಗ್ ಬಾಸ್ ನಡೆಯುವ ಸ್ಥಳದಲ್ಲಿ ಘನತ್ಯಾಜ್ಯ ಸಂಸ್ಕರಣಾ ಘಟಕ(ಎಸ್ಟಿಪಿ) ನಿರ್ಮಾಣದ ಸಂಬಂಧ ಕಳೆದ ವರ್ಷ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಪ್ರಸಕ್ತ ವರ್ಷದಲ್ಲಿ ಪರಿಸರ ಇಲಾಖೆಯಿಂದ ಅನುಮತಿ ಕೋರಿ ಈವರೆಗೂ ಮನವಿ ಸಲ್ಲಿಸಿಲ್ಲ ಎಂದು ತಿಳಿಸಿದರು.
ಅಲ್ಲದೆ, ಬಿಗ್ ಬಾಸ್ ಆಯೋಜಕರು ಅನುಮತಿ ಕೋರಿ ಮನವಿ ಸಲ್ಲಿಸಿದಲ್ಲಿ, ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಉಲ್ಲಂಘನೆ ಆಗಿದ್ದಲ್ಲಿ ನಿಗದಿತ ದಂಡ ವಿಧಿಸಿ ಕಾನೂನು ಪ್ರಕಾರದಲ್ಲಿ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
