ಸುಕ್ಮಾ(ಛತ್ತೀಸಗಢ) : ಛತ್ತೀಸಗಢದಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದ ಇಬ್ಬರು ಮಹಿಳೆಯರು ಸೇರಿದಂತೆ 09 ನಕ್ಸಲರು ಶನಿವಾರ ಪೊಲೀಸರಿಗೆ ಶರಣಾಗಿದ್ದಾರೆ. ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್ಪಿಎಫ್)ನ ಹಿರಿಯ ಅಧಿಕಾರಿಗಳ ಎದುರು ಹಾಜರಾದ ನಕ್ಸಲರು ‘ಮಾವೋವಾದಿ ಸಿದ್ಧಾಂತ ಪೊಳ್ಳು ಹಾಗೂ ಅಮಾನವೀಯವಾಗಿದೆ. ನಕ್ಸಲರ ನಡುವೆಯೇ ಆಂತರಿಕ ಸಂಘರ್ಷವಿದೆ’ ಎಂದು ಹೇಳಿ ಶರಣಾಗಿದ್ದಾರೆ.
ನಕ್ಸಲರು ಶರಣಾಗತಿ ವೇಳೆ ಯಾವುದೇ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಲಿಲ್ಲ. ಇದೇ ರೀತಿಯಲ್ಲಿ ಕೆಲವು ದಿನದ ಹಿಂದೆ ಕರ್ನಾಟಕದಲ್ಲಿ ಕೂಡ ಶಸ್ತ್ರಾಸ್ತ್ರ ರಹಿತರಾಗಿ 6 ನಕ್ಸಲರು ಸಿಎಂ ಮುಂದೆ ಶರಣಾಗಿದ್ದರು. ಈ ಬೆಳವಣಿಗೆಯನ್ನು ಬಿಜೆಪಿ ಟೀಕಿಸಿತ್ತು. ಇದೀಗ ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲೂ ಇಂಥದ್ದೇ ಬೆಳವಣಿಗೆಯಾಗಿರುವುದು ಗಮನಾರ್ಹ.
ಶರಣಾದ ನಕ್ಸಲೀಯರಿಗೆ ತಲಾ 25 ಸಾವಿರ ರೂ, ನೀಡಲಾಗಿದ್ದು, ಸರ್ಕಾರ ನೀತಿಯಂತೆ ಪುನರ್ವಸತಿ ಕಲ್ಪಿಸಲಾಗುವುದು ಎಂದಿರುವ ಅಧಿಕಾರಿಗಳು ಕಳೆದ ವರ್ಷ ಬಸ್ತರ್ ಪ್ರದೇಶದಲ್ಲಿ 792 ನಕ್ಸಲರು ಶರಣಾಗಿದ್ದರು ಅಂತ ಮಾಹಿತಿಯಿತ್ತಿದ್ದಾರೆ,
43 ಲಕ್ಷ ರು. ಬಹುಮಾನ :
9 ನಕ್ಸಲರ ಪತ್ತೆಗೆ ಪೊಲೀಸರು 43 ಲಕ್ಷ ರೂ. ಬಹುಮಾನ ಘೋಷಿಸಿದ್ದರು. ಶರಣಾದ ನಕ್ಸಲರ ಪೈಕಿ ರಾನ್ಸಾಯಿ ಅಲಿಯಾಸ್ ಓಯಂ ಬುಸ್ಕಾ, ಪ್ರದೀಪ್ ಅಲಿಯಾಸ್ ರವ್ವ ರಾಕೇಶ್ ತಲೆಗೆ ತಲಾ 8 ಲಕ್ಷ ರೂ. ಘೋಷಣೆಯಾಗಿತ್ತು. ಉಳಿದಂತೆ ನಾಲ್ವರ ತಲೆಗೆ 5 ಲಕ್ಷ ರೂ. ಮಹಿಳಾ ನಕ್ಸಲ್ ತಲೆಗೆ 3 ಲಕ್ಷ ರೂ., ಮಹಿಳೆ ಸೇರಿದಂತೆ ಇನ್ನಿಬ್ಬರ ಇಬ್ಬರ ತಲೆಗೆ 2 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು. 2007ರ ನಾರಾಯಣಪುರ, ರಾಣಿಬೋಡ್ಲಿ, 2017 ಮತ್ತು 2020ರಲ್ಲಿ ಸುಕ್ಮಾದಲ್ಲಿ ನಡೆದಿದ್ದ ಭದ್ರತಾ ಸಿಬ್ಬಂದಿಗಳ ಮೇಲಿನ ದಾಳಿ ಪ್ರಕರಣದಲ್ಲಿ ಈ ನಕ್ಸಲರು ಭಾಗಿಯಾಗಿದ್ದರು.
