ಚಿಕ್ಕಮಗಳೂರು: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸುವುದಲ್ಲದೆ, ಶಿಷ್ಟಾಚಾರ ಪಾಲನೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚನೆ ನೀಡಿದರು.
ಬಾಳೆಹೊನ್ನೂರಿನ ಕಲಾರಂಗ ಕ್ರೀಡಾಂಗಣದ ವಿದ್ಯಾ ಗಣಪತಿ ಸಮುದಾಯ ಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಕ್ಷಣೆ, ಬಂದೋಬಸ್ತ್ ಹಾಗೂ ಶಿಷ್ಟಾಚಾರ ಪಾಲನೆ ಮಾಡುವುದು ಜಿಲ್ಲಾಡಳಿತದ ಕರ್ತವ್ಯವಾಗಿದ್ದು, ಪ್ರತಿಯೊಂದು ಇಲಾಖೆಗಳು ಈ ಕಾರ್ಯದಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಹೆಲಿಪ್ಯಾಡ್ನಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಸೂಚನೆ ನೀಡಿದ ಅವರು, ಶುಚಿತ್ವ ಕಾಪಾಡುವ ಬಗ್ಗೆ ಸಹ ಅಗತ್ಯ ಗಮನ ಹರಿಸಿಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಕಾರ್ಯಕ್ರಮ ನಡೆಯುವ ಈ ಸಮುದಾಯ ಭವನದಲ್ಲಿ ವೇದಿಕೆ ಹಾಗೂ ಪ್ರಾಂಗಣವನ್ನು ಸುಸಜ್ಜಿತಗೊಳಿಸಬೇಕೆಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ವಾಹನ ನಿಲುಗಡೆ ಮಾಡಲು ಪೂರಕವಾಗಿ ಕೈಗೊಳ್ಳಲಾಗಿರುವ ಕ್ರಮದ ಬಗ್ಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ.ಜಯಕುಮಾರ್ ಅವರಿಂದ ಮಾಹಿತಿ ಪಡೆದರು. ಈಗಾಗಲೇ ಈ ಸಂಬಂಧ ಸೆ.೧೫ ರಂದು ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಹೆಲಿಪ್ಯಾಡ್ ನಿರ್ಮಾಣ ಹಾಗೂ ಬೌಂಡರಿ ಗುರುತಿಸುವಿಕೆಯ ಕಾರ್ಯದ ಬಗ್ಗೆ ಸಹ ಮಾಹಿತಿ ಪಡೆದ ಅವರು, ಜಾನುವಾರುಗಳ ಓಡಾಟ ಸೇರಿದಂತೆ ಸ್ಥಳದಲ್ಲಿ ಯಾವುದೇ ರೀತಿಯ ಅಡಚನೆಗಳಾಗದಂತೆ ಎಚ್ಚರಿಕೆ ವಹಿಸಲು ಅವರು ನಿರ್ದೇಶನ ನೀಡಿದರು.
ಗಣ್ಯರ ಆಗಮನದ ಸಂದರ್ಭದಲ್ಲಿ ಆಂಬುಲೆನ್ಸ್ಸ್ ವ್ಯವಸ್ಥೆ ಮಾತ್ರವಲ್ಲದೆ, ನುರಿತ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ತಿಳಿಸಿದ ಅವರು, ಈಗಾಗಲೇ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಸಜ್ಜಿತ ವೈದ್ಯಕೀಯ ಸಲಕರಣೆಗಳ ವ್ಯವಸ್ಥೆಯೊಂದಿಗೆ ತುರ್ತು ನಿಗಾ ಘಟಕ ಸುಸಜ್ಜಿತವಾಗಿರುವಂತೆ ಕಾರ್ಯಕ್ರಮ ನಡೆಯುವ ಸ್ಥಳದ ಬಳಿಯೂ ಅಗತ ಚಿಕಿತ್ಸಾ ವ್ಯವಸ್ಥೆ ಲಭ್ಯವಿರುವಂತೆ ನೋಡಿಕೊಳ್ಳುವುದಲ್ಲದೆ, ನೋಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೆ, ಗಣ್ಯರು ಮಾತ್ರವಲ್ಲದೆ, ಸಾರ್ವಜನಿಕರಿಗೂ ಸಹ ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ಗಣ್ಯರಿಗೆ ಒದಗಿಸುವ ಊಟೋಪಚಾರದಲ್ಲಿ ಆಹಾರದ ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವಿಭಾಗದ ಅಂಕಿತ ಅಧಿಕಾರಿಗಳು ಪರೀಕ್ಷಿಸುವುದು ಅಗತ್ಯವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ವರದಿ ನೀಡಬೇಕೆಂದು ಸೂಚಿಸಿದರು. ಕಾರ್ಯಕ್ರಮದ ಪೂರ್ಣ ಅವಧಿಯಲ್ಲಿ ವಿದ್ಯುತ್ ಅಡಚಣೆಯಾಗದಂತೆ ಹಾಗೂ ನಿರಂತರವಾಗಿ ವಿದ್ಯುತ್ ಇರುವಂತೆ ನೋಡಿಕೊಳ್ಳಬೇಕು ಎಂದು ಕೊಪ್ಪ ವಿಭಾಗದ ಮೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚಿಸಿದರು.
