ಚಿಕ್ಕಮಗಳೂರು: ಸೋಮವಾರದಿಂದ ಕೊಪ್ಪದಲ್ಲಿ 32 ಸಿಬ್ಬಂದಿಯನ್ನೊಳಗೊಂಡ ಆನೆ ಕಾರ್ಯಪಡೆಯನ್ನು ಪ್ರಾರಂಭ ಮಾಡುತ್ತೇವೆ. ಈ ಬಗ್ಗೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ನಾರಾಯಣ ಗುರು ಸಮುದಾಯ ಭವನದಲ್ಲಿ ಶನಿವಾರ ನಡೆದ ಮಲೆನಾಡಿನ ಜ್ವಲಂತ ಸಮಸ್ಯೆಗಳ ಕುರಿತು ಮತ್ತು ರೈತ ಹೋರಾಟದ ಪ್ರಕರಣ ಕುರಿತ ಸಂವಾದ ಸಭೆಯಲ್ಲಿ, ಸಚಿವ ಖಂಡ್ರೆ ಅವರು ಸ್ಥಳೀಯ ರೈತರು ಹಾಗೂ ವಿವಿಧ ಸಂಘಟನೆಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಜೊತೆ ಮಾನವ ಹಾಗೂ ಪ್ರಾಣಿಗಳ ನಡುವೆ ನಡೆಯುತ್ತಿರುವ ಸಂಕಷ್ಟದ ಕುರಿತು ಗಂಭೀರ ಚರ್ಚೆ ನಡೆಸಿದರು.

ಇದೇ ವೇಳೆ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಶೃಂಗೇರಿ ಕ್ಷೇತ್ರ ವತಿಯಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಒಂದು ವಾರದ ಅಂತರದಲ್ಲಿ ಇಬ್ಬರು ಆನೆ ದಾಳಿಗೆ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ರೈತರು ಮತ್ತು ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸ್ ಇಲಾಖೆ ರೈತರು ಮತ್ತು ಕಾರ್ಮಿಕರ ಮೇಲೆ ಲಾಠಿ ಚಾರ್ಜ್ ನಡೆಸಿತ್ತು. ಪ್ರತಿಭಟನಾ ನಿರತರ ಮೇಲೆ ಸುಳ್ಳು ಕೇಸ್ ಹಾಕಿದ್ದರು. ಪೊಲೀಸ್ ಇಲಾಖೆ ದಾಖಲಿಸಿರುವ ಸುಳ್ಳು ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಸೂಚನೆ ನೀಡಬೇಕೆಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿ ಒತ್ತಾಯಿಸಿತು.
ಸಭೆಯ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಖಂಡ್ರೆ, “ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷದ ಕುರಿತು ರೈತರ ಜೊತೆ ಗಂಭೀರವಾಗಿ ಸಂವಾದ ನಡೆಸಿದ್ದೇವೆ. ಈ ಸಂವಾದದಲ್ಲಿ ಅನೇಕ ರೈತ ಮುಖಂಡರು ಹಾಗೂ ಸಂಘ ಸಂಸ್ಥೆಗಳು ತಮ್ಮದೇ ಆದ ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದಾರೆ. ಇತ್ತೀಚೆಗೆ ಆನೆ ತುಳಿತದಿಂದ ಸುಮಾರು ಆರು ಜನ ಜೀವ ಕಳೆದುಕೊಂಡಿದ್ದಾರೆ. ಇದು ಅತ್ಯಂತ ದುಃಖದ ಸಂಗತಿಯಾಗಿದ್ದು, ಅವರ ನೋವಿನಲ್ಲಿ ನಮ್ಮ ಅರಣ್ಯ ಇಲಾಖೆ ಹಾಗೂ ಸರ್ಕಾರವಿದೆ. ರೈಲ್ವೆ ಬ್ಯಾರಿಕೇಡ್, ಕಂದಕ, ಫೆನ್ಸಿಂಗ್ ಮಾಡುವುದರ ಜೊತೆಗೆ ಕೊಪ್ಪ ತಾಲೂಕಿನಲ್ಲಿ ಒಂದು ಆನೆ ಕಾರ್ಯಪಡೆ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.
