ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಹೆಮ್ಮೆಯಿಂದ ತಿಳಿಸಿದರು.
ನಗರದ ರತ್ನಗಿರಿ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1955ರಲ್ಲಿ ಕೇವಲ 1,430 ರೂ. ಆರಂಭಿಕ ಠೇವಣಿಯೊಂದಿಗೆ ಆರಂಭಗೊಂಡ ಬ್ಯಾಂಕ್ ಇಂದು 28 ಶಾಖೆಗಳು, 129 ಪ್ರಾಥಮಿಕ ಸಹಕಾರ ಸಂಘಗಳು ಹಾಗೂ 267 ಇತರ ಸಹಕಾರ ಸಂಘಗಳು ಸೇರಿದಂತೆ ಒಟ್ಟು 396 ಸದಸ್ಯ ಸಹಕಾರ ಸಂಘಗಳ ಮೂಲಕ ಕೃಷಿ ಮತ್ತು ಕೃಷಿಯೇತರ ಕ್ಷೇತ್ರಗಳಿಗೆ ಸಾಲ ಸೌಲಭ್ಯ ಒದಗಿಸುತ್ತಿದೆ ಎಂದರು.
2025-26ನೇ ಸಾಲಿನ ಶಾಸನಬದ್ಧ ಲೆಕ್ಕ ಪರಿಶೋಧನೆ ಹಾಗೂ ನಬಾರ್ಡ್ ನಡೆಸಿದ ತಪಾಸಣೆಯಲ್ಲಿ ಬ್ಯಾಂಕ್ ಸತತವಾಗಿ ‘ಎ’ ವರ್ಗೀಕರಣ ಪಡೆದಿದೆ. ಬ್ಯಾಂಕ್ 2025-26ನೇ ಸಾಲಿನ ಅಂತ್ಯಕ್ಕೆ 65.99 ಕೋಟಿ ರೂ. ಷೇರು ಬಂಡವಾಳ ಹೊಂದಿದ್ದು, 2.24 ಲಕ್ಷಕ್ಕೂ ಅಧಿಕ ಠೇವಣಿದಾರರಿಂದ 1,568.53 ಕೋಟಿ ರೂ. ಠೇವಣಿ ಸಂಗ್ರಹಿಸಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರದ ಕೃಷಿ ಸಾಲ ಯೋಜನೆಯಡಿ 2025-26ನೇ ಸಾಲಿನಲ್ಲಿ ಜಿಲ್ಲೆಗೆ 75,119 ರೈತರಿಗೆ 1,017.19 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸುವ ಗುರಿ ನಿಗದಿಪಡಿಸಲಾಗಿತ್ತು. ಮಾರ್ಚ್ 2026ರ ಅಂತ್ಯಕ್ಕೆ 54,992 ರೈತರಿಗೆ 843.84 ಕೋಟಿ ರೂ. ಕೆಸಿಸಿ ಬೆಳೆ ಸಾಲ ವಿತರಿಸಲಾಗಿದೆ. 2026-27ನೇ ಸಾಲಿನಲ್ಲಿ 1,009 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದರು.
ಶೇ.3ರ ಬಡ್ಡಿದರದಲ್ಲಿ ಕೃಷಿ ಮಧ್ಯಮಾವಧಿ ಸಾಲದಡಿ 2025-26ರಲ್ಲಿ 380 ರೈತರಿಗೆ 26 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿತ್ತು. ಈ ಪೈಕಿ 353 ರೈತರಿಗೆ 26 ಕೋಟಿ ರೂ. ಸಾಲ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲೂ 380 ರೈತರಿಗೆ 26 ಕೋಟಿ ರೂ. ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
2025-26ನೇ ಸಾಲಿನಲ್ಲಿ ಒಟ್ಟು 18,061 ಸಾಲಗಾರ ಸದಸ್ಯರಿಗೆ 569.57 ಕೋಟಿ ರೂ. ಕೃಷಿಯೇತರ ಸಾಲ ವಿತರಿಸಲಾಗಿದೆ. 2026-27ನೇ ಸಾಲಿನಲ್ಲಿ ಈ ಪ್ರಮಾಣವನ್ನು ಹೆಚ್ಚಿಸಿ 700 ಕೋಟಿ ರೂ. ಕೃಷಿಯೇತರ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿ.ಟಿ. ರವಿ ತಿಳಿಸಿದರು.
