ಸಕಲೇಶಪುರ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವಿಭಾಗದಲ್ಲಿ ಮಂಗಳವಾರ ಪ್ಲೈವುಡ್ ಹೊತ್ತು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಮಂಗಳೂರಿನತ್ತ ಪಯಣ ಬೆಳೆಸುತ್ತಿದ್ದ ಲಾರಿಯು ಶಿರಾಡಿ ಘಾಟಿಯ ಪ್ರಸಿದ್ಧ ‘ಡಬಲ್ ಟರ್ನ್’ ತಲುಪಲು ಸುಮಾರು 3 ಕಿ.ಮೀ ಬಾಕಿ ಇರುವಾಗ ಈ ಅಪಘಾತ ಸಂಭವಿಸಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿಸಿದ್ದಾರೆ.
ಲಾರಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಲ್ಪ ಸಮಯ ಟ್ರಾಫಿಕ್ ಉಂಟಾಗಿತ್ತು.. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವಾಹನ ತೆರವು ಕಾರ್ಯದಲ್ಲಿ ತೊಡಗಿದ್ದು. ಸದ್ಯ ಕ್ರೇನ್ ಮೂಲಕ ಲಾರಿಯನ್ನು ಎತ್ತಿದ್ದಾರೆ.
ಘಾಟಿಯ ಕಡಿದಾದ ತಿರುವುಗಳಲ್ಲಿ ವಾಹನ ಚಾಲಕರು ಎಚ್ಚರಿಕೆ ವಹಿಸುವಂತೆ ಪೊಲೀಸರು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
