ಪುತ್ತೂರು(ದಕ್ಷಿಣ ಕನ್ನಡ) : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧದ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು.
ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು.
ನನಗೆ ಉಳ್ಳಾಲ್ತಿ ಮತ್ತು ಮಹಾಲಿಂಗೇಶ್ವರ ದೇವರ ಮೇಲೆ ನಂಬಿಕೆ ಇದೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಭಾರತೀಯ ಜನತಾ ಪಾರ್ಟಿ ನನ್ನ ಹಿಂದೆ ನಿಂತಿದೆ. ನನ್ನ ಸಂಕಷ್ಟದ ದಿನದಲ್ಲಿ ನನಗೆ ಸಹಕರಿಸಿದ ಬಿಜೆಪಿ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕೊನೆಯ ಉಸಿರಿರುವವರೆಗೂ ಹಿಂದುತ್ವಕ್ಕಾಗಿ ಹೋರಾಡುತ್ತೇನೆ. ಭಾರತೀಯ ಜನತಾ ಪಕ್ಷವನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಟಗೊಳಿಸುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಈ ವೇಳೆ ಪ್ರತಿಕ್ರಿಯಿಸಿದರು.



