ಬಾಳೆಹೊನ್ನೂರು: ಬಹು ಜನ್ಮಗಳ ಪುಣ್ಯ ಫಲದಿಂದ ಮಾನವ ಜೀವನ ದೊರೆತಿದೆ. ಗುರುವಿನ ಕಾರುಣ್ಯ ಎಲ್ಲರಿಗೂ ಬೇಕು. ಗುರು ಪೀಠಗಳ ದರ್ಶನದಿಂದ ಜೀವನ ಪಾವನಗೊಳ್ಳುವುದೆಂದು ಮೈಸೂರು ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜೇಂದ್ರ ಒಡೆಯರ್ ಅಭಿಪ್ರಾಯಪಟ್ಟರು.
ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಲಿಂ. ಶ್ರೀಮದ್ ರಂಭಾಪುರಿ ಶಿವಾನಂದ ಜಗದ್ಗುರುಗಳ ಪೀಠಾರೋಹಣ ಶತಮಾನೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಮನುಷ್ಯ ಜೀವನದಲ್ಲಿ ಸಾಧಿಸಿದ್ದು ಅಲ್ಪ. ಸಾಧಿಸಬೇಕಾದದ್ದು ಬಹಳಷ್ಟಿದೆ. ದೇವರು ಧರ್ಮ ಮತ್ತು ಗುರುವಿನಲ್ಲಿ ನಂಬಿಕೆ ಶ್ರದ್ಧೆ ಇರಬೇಕಾಗುತ್ತದೆ. ಸುಖ ಶಾಂತಿ ಬದುಕಿಗೆ ಇವೆಲ್ಲವುಗಳ ಅವಶ್ಯಕತೆ ಬಹಳಷ್ಟಿದೆ. ಶ್ರೀ ರಂಭಾಪುರಿ ಪೀಠಕ್ಕೂ ಮತ್ತು ಮೈಸೂರು ರಾಜ ಮನೆತನಕ್ಕೂ ಪೂರ್ವದಿಂದಲೂ ನಿಕಟ ಸಂಬಂಧವಿರುವ ಇತಿಹಾಸವನ್ನು ಕಾಣುತ್ತೇವೆ. ಶ್ರೀ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಜಯಚಾಮರಾಜ ಒಡೆಯರ್ ಈ ಕ್ಷೇತ್ರಕ್ಕೆ ಆಗಮಿಸಿ ಆಶೀರ್ವಾದ ಪಡೆದ ಸಂಗತಿ ತಿಳಿದು ನಮಗೆ ಬಹಳ ಹರುಷವಾಗಿದೆ. ಲಿಂ. ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳು ಶ್ರೀ ರಂಭಾಪುರಿ ಪೀಠದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವರು. ಅಂಥ ಪರಮ ಪೂಜ್ಯರು ಮೈಸೂರು ಸಂಸ್ಥಾನಕ್ಕೆ ದಯಮಾಡಿಸಿ ಆಶೀರ್ವದಿಸಿದ ಆ ಘಳಿಗೆ ಅಮೂಲ್ಯವಾದದ್ದು. ಈ ಸಂಬಂಧ ನಿರಂತರವಾಗಿರಲಿ ಎಂದರು.
ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯರು, ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯರು, ಸುಳ್ಳ ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಬಂಕಾಪುರ ರೇವಣಸಿದ್ಧ ಶಿವಾಚಾರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರನ್ನು ಮೊದಲ್ಗೊಂಡು ಸುಮಾರು ೫೦ಕ್ಕೂ ಹೆಚ್ಚು ಮಠಾಧೀಶರು ವೇದಿಕೆ ಮೇಲೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಇವರು ವೀರಶೈವ ಧರ್ಮದ ಕೀರ್ತಿ ಕಳಸ ಕೃತಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಶ್ರೀ ರಂಭಾಪುರಿ ಶಿವಾನಂದ ಜಗದ್ಗುರುಗಳ ಜೀವನ ದರ್ಶನ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್, ಅ.ಭಾ.ವೀ.ಲಿಂ.ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಎಂ.ಲೋಕೇಶ್, ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆ ಅಧ್ಯಕ್ಷ ಯು.ಎಂ.ಬಸವರಾಜ ಮತ್ತು ಆಡಳಿತ ಮಂಡಳಿಯ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
