ಹಾಸನ: ಸಮೀಕ್ಷೆಗಾಗಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇ ಗೆಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಸ್ಕೂಟಿಯಿಂದ ಬಿದ್ದು ಶಿಕ್ಷಕಿಯ ಎಡಗೈ ಮುರಿತವಾಗಿದೆ. ಗೆಂಡೆಹಳ್ಳಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕಿ ಲುಕ್ನಾ ಗಾಯಗೊಂಡವರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಸಲು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಶಿಕ್ಷಕಿ ಲುಕ್ನಾ ಅವರು ಸ್ಕೂಟಿ ನಿಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬೀದಿ ನಾಯಿಗಳ ಗುಂಪು ದಾಳಿ ಮಾಡಿದೆ. ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಅವರು ಭಯದಿಂದ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಪರಿಣಾಮವಾಗಿ ಅವರ ಎಡಗೈ ಮುರಿದಿದೆ. ತಕ್ಷಣವೇ ಸ್ಥಳಕ್ಕೆ ಬಂದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಹಾಗೂ ಮಾಜಿ ಅಧ್ಯಕ್ಷ ಗಂಗಾಧರ್ ಅವರು ನಾಯಿಗಳಿಂದ ಶಿಕ್ಷಕಿಯನ್ನು ರಕ್ಷಿಸಿದ್ದಾರೆ. ಗಾಯಗೊಂಡ ಶಿಕ್ಷಕಿ ಲುಕ್ನಾ ಅವರಿಗೆ ತಕ್ಷಣವೇ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಂತರ ಹಾಸನಕ್ಕೆ ರವಾನಿಸಲಾಗಿದೆ.
ಈ ಘಟನೆ ಬೇಲೂರು ಪಟ್ಟಣದಲ್ಲಿ ಭಾನುವಾರ ನಡೆದಿದ್ದ ಮತ್ತೊಂದು ನಾಯಿ ದಾಳಿಯ ಘಟನೆ ಮಾಸುವ ಮುನ್ನವೇ ನಡೆದಿದ್ದು, ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
