ಹಾಸನ : ಅಕ್ಟೋಬರ್ 24 ರಿಂದ ಪ್ರಾರಂಭವಾಗಲಿರುವ ಶ್ರಿ ಹಾಸನಾಂಬ ಮತ್ತು ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವವನ್ನು ಊರಿನ ಹಬ್ಬದಂತೆ ಆಚರಿಸಬೇಕು. ಬರುವ ಭಕ್ತಾದಿಗಳಿಗೆ ಯಾವ ತೊಂದರೆ ಆಗದಂತೆ ಕೊಟ್ಟಿರುವ ಜವಬ್ಧಾರಿಯನ್ನು ವಿವಿಧ ಇಲಾಖೆ ಅಧಿಕಾರಿಗಳು, ಹಾಗೂ ಸಂಘ ಸಂಸ್ಥೆಗಳು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಕರೆ ನೀಡಿದರು.

ನಗರದ ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಹಾಸನಾಂಬ ಉತ್ಸವದ ವೆಬ್ಸೈಟ್ ಗೆ ಚಾಲನೆ ಹಾಗೂ ಇಲಾಖೆಯ ವಿವಿಧ ಅಧಿಕಾರಿಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ತರಬೇತಿ ಕಾರ್ಯಗಾರದಲ್ಲಿ ಉದ್ದೇಶಿಸಿ ಮಾತನಾಡಿದರು. ಪ್ರತಿ ವರ್ಷ ನಡೆಯುವ ಅಧಿ ದೇವತೆ ಹಾಸನಾಂಬೆ ಮತ್ತು ಶ್ರಿ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವ ಗೊಂದಲವಾಗದಂತೆ ಸುಗಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು.ಈ ಬಾರಿಯೂ ಕೂಡ ಮುಖ್ಯಮಂತ್ರಿಯನ್ನು ಆಹ್ವಾನ ಮಾಡಲಾಗಿದೆ. 25ಕ್ಕೆ ಹಾಸನಕ್ಕೆ ಬರುವುದಾಗಿ ಹೇಳಿದ್ದಾರೆಂದು ಮಾಹಿತಿ ನೀಡಿದರು.


ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಿದ್ದು, ಇದೆ ತಿಂಗಳು ೨೬ ರಿಂದ ೨೯ರ ಒಳಗೆ ಬರುವುದಾಗಿ ಹೇಳಿದ್ದಾರೆ. ಈ ವರ್ಷ 9 ದಿವಸ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಬರುವ ನಿರೀಕ್ಷೆಯಿದೆ. ರಸ್ತೆಗಳ ಡಾಂಬರೀಕರಣ ಮಾಡಲಾಗಿದೆ. ದೇವಸ್ಥಾನದ ಒಳ ಭಾಗದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಸರದಿ ಸಾಲಿನಲ್ಲಿ ಬರುವ ಭಕ್ತಾದಿಗಳಿಗೆ ಯಾವ ಸಮಸ್ಯೆ ಆಗದಂತೆ ಕುಡಿಯುವ ನೀರು, ಶೌಚಾಲಯ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಹಾಸನ ಉಪವಿಭಾಗಧಿಕಾರಿ ಮಾರುತಿ ಮಾತನಾಡಿ, ನಿಯೋಜನೆ ಮಾಡಿದ ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸಲು ತರಬೇತಿ ಹಮ್ಮಿಕೊಳ್ಳಲಾಗಿದೆ. ದೇವಾಲಯ ಪ್ರತಿ ನೂರು ಮೀಟರ್ಗೆ ಮ್ಯಾನೆಜ್ಮೆಂಟ್ ಕೌಂಟರ್ ಮಾಡಲಾಗಿದೆ ಎಂದರು.
ತರಬೇತಿ ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ, ಜಿಲ್ಲಾ ಭೂ ದಾಖಲೆಗಳ ಅಧಿಕಾರಿ ಸಂಜಯ್ ಸೇರಿದಂತೆ ವಿವಿಧ ತಾಲೂಕಿನ ತಹಸೀಲ್ದಾರ್, ಉಪವಿಭಾಗಧಿಕಾರಿಗಳು ಉಪಸ್ಥಿತರಿದ್ದರು.

