ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಸುಮಾರು 2 ಗಂಟೆ ವೇಳೆಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಲಾರಿ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಕರಕಲಾಗಿದೆ.
ಜಾವಗಲ್ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಲಾರಿಯ ಟಯರ್ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿದ್ದು, ಲಾರಿಯಲ್ಲಿದ್ದ ಮೆಕ್ಕೆಜೋಳ ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಲಾರಿಯೂ ಸಹ ಬೆಂಕಿಗೆ ಆಹುತಿಯಾಗಿದೆ.
ಬೆಂಕಿಯ ತೀವ್ರತೆಯಿಂದ ಚಾರ್ಮಾಡಿ ಘಾಟ್ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ.
ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
