ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೆ ಸುಮಾರು 12.5 ಕೋಟಿ ರೂ. ವೆಚ್ಚದಲ್ಲಿ 20 ಹೊಸ ಆರೋಗ್ಯ ಕ್ಷೇಮ ಕೇಂದ್ರಗಳು ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಸಹ ನಡೆದಿರುವುದಾಗಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀ ದಿನೇಶ್ ಗುಂಡೂರಾವ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಶೃಂಗೇರಿ ತಾಲ್ಲೂಕು ಅಡ್ಡಗದ್ದೆ ಗ್ರಾ.ಪಂ. ವ್ಯಾಪ್ತಿಯ ಬೆಳಂದೂರು ಗ್ರಾಮದ ಹೊನ್ನವಳ್ಳಿಯಲ್ಲಿ ಇಂದು ನೂರು ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶೃಂಗೇರಿ ತಾಲ್ಲೂಕಿಗೆ ತೀರಾ ಅಗತ್ಯವಿರುವ ಮಹತ್ವಪೂರ್ಣವಾದ ಯೋಜನೆ ಇದಾಗಿದ್ದು. ಒಟ್ಟು 37.65 ಕೋಟಿ ರೂ. ವೆಚ್ಚದ ಇಲ್ಲಿನ ಉದ್ದೇಶಿತ ಆಸ್ಪತ್ರೆ ಕಟ್ಟಡದ ಕಾಮಗಾರಿಯನ್ನು ಕ್ಷಿಪ್ರಗತಿಯಲ್ಲಿ ನಿರ್ವಹಿಸಿ ಮಳೆ ಬಿಡುವು ನೀಡಿದ ಮುಂದಿನ ಆರು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರಲ್ಲದೆ, ಇನ್ನು ಹಲವು ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಹೇಳಿದರು. ಈಗಾಗಲೇ ಬಾಳೆಹೊನ್ನೂರಿಗೆ ೫೦ ಹಾಸಿಗೆಯ ಆಸ್ಪತ್ರೆ ಕಟ್ಟಡಕ್ಕೆ ಬೇಡಿಕೆ ಬಂದಿದ್ದು, ಈ ತಕ್ಷಣಕ್ಕೆ ಈ ಯೋಜನೆಗೆ ಅವಕಾಶವಾಗದಿದ್ದರೂ ಮುಂದಿನ ಆಯವ್ಯಯದಲ್ಲಿ ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಎರಡು ಬಾರಿ ಕಾರ್ಯಕ್ರಮ ನಿಗದಿಯಾಗಿತ್ತು. ಮಳೆಯ ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ. ಆಸ್ಪತ್ರೆ ಕಟ್ಟಡಕ್ಕೆ ಸಂಬಂಧಿಸಿದಂತೆ
ಈ ಭಾಗದ ಬಹುದಿನಗಳ ಬೇಡಿಕೆಯಾದ ಒತ್ತುವರಿ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ. ರಸ್ತೆ ಮಲೆನಾಡಿನಲ್ಲಿ ಬಹಳಷ್ಟು ರಸ್ತೆಗಳು ಗುಂಡಿ ಬಿದ್ದಿವೆ.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಆರೋಗ್ಯ ಇಲಾಖೆ ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಮಲ್ಲಿಕಾ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್,ಎಸ್,ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ಬಾಬು, ಉಪವಿಭಾಗಾಧಿಕಾರಿ ಸುದರ್ಶನ್ ಮತ್ತು ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.
