ಚಿಕ್ಕಮಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಬೋರ್ವೆಲ್ ಲಾರಿಗೆ ಬೊಲೆರೊ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ ಏಳು ಜನರಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ದೋರನಾಳು ಗ್ರಾಮದ ಬಳಿ ಸಂಭವಿಸಿದೆ.
ಘಟನೆಯಲ್ಲಿ ಉಳಿದ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.
ಎಂ.ಸಿ.ಹಳ್ಳಿಯಿಂದ ಕಾರ್ಮಿಕರು ಪ್ರತಿನಿತ್ಯ ಬೊಲೆರೊ ಜೀಪ್ನಲ್ಲಿ ಕೂಲಿ ಕೆಲಸಕ್ಕಾಗಿ ಕಲ್ಲತ್ತಿಗಿರಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಕೆಲಸ ಮುಗಿಸಿಕೊಂಡು ವಾಪಸ್ ಎಂ.ಸಿ.ಹಳ್ಳಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸ್ಥಳಕ್ಕೆ ತರೀಕೆರೆ ಮತ್ತು ಲಿಂಗದಹಳ್ಳಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
